ಹಾವೇರಿ: ಮಹಿಳೆಯರ ಮೇಲಿನ ಆತ್ಯಾಚಾರ, ದೌರ್ಜನ್ಯ ತಡೆಗಟ್ಟಲು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತಾನಾಡಿ, ವಿದ್ಯಾರ್ಥಿನಿಯರ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಶೋಷಣೆ, ಲೈಂಗಿಕ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಇರುವುದು ಈ ಕೃತ್ಯಗಳಿಗೆ ಕಾರಣವಾಗಿವೆ. ಈ ಪ್ರಕರಣಗಳು ದೇಶಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ - ಕಾಲೇಜುಗಳಲ್ಲಿ ‘ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚನೆ’ ಮಾಡಬೇಕು. ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತಾನಾಡಿ, ಜಿಲ್ಲೆಯಲ್ಲೂ ಕೂಡ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರಗಳು ಹೆಚ್ಚುತ್ತಲೇ ಇವೆ, ರಾಣೆಬೆನ್ನೂರು ತಾಲ್ಲೂಕಿನಲ್ಲಿ ಎರಡು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದರು.
ಎಸ್ಎಫ್ಐ ರಾಣೇಬೆನ್ನೂರ ತಾಲ್ಲೂಕು ಘಟಕದ ಅಧ್ಯಕ್ಷೆ ಜ್ಯೋತಿ ಪೊಲೀಸಗೌಡರು, ಮುಖಂಡರಾದ ಶ್ರೀಕಾಂತ್ ಬಾರ್ಕಿ, ಅರುಣ್ ಆರೇರ್, ನಿಯಾಜ್ , ಪ್ರಸನ್ನ ಕಡಕೋಳ, ಚಿನ್ನು ಹಾವೇರಿ,ಪವಿತ್ರ ಎಚ್,ಸುಷ್ಮಾ ಎನ್ ಎಸ್, ಜ್ಯೋತಿ ಅರ್ ಎಚ್, ಶ್ವೇತ ಕೆ ಆರ್, ಅಂಭಿಕಾ, ಶೈಲಾ ಕೆ ಎಲ್, ಶಿಲ್ಪ ಇದ್ದರು.