ಹಾವೇರಿ: ಗ್ರಾಮ ಪಂಚಾಯ್ತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯ್ತಿ ನೌಕರರ ಸಂಘದ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯ್ತಿ ಸಿಬ್ಬಂದಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾ ಪಂಚಾಯ್ತಿ ಕಾರ್ಯದರ್ಶಿ ಜಾಫರ್ ಸುತ್ತಾರ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಐ. ಈಳಗೇರ ಮಾತನಾಡಿ, ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರ್ಕಾರದ ಆದೇಶದ ಪ್ರಕಾರ ವೇತನ ನೀಡುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಜಿಲ್ಲಾ ಪಂಚಾಯ್ತಿಯು ತಾಲ್ಲೂಕು ಪಂಚಾಯ್ತಿಗಳಿಗೆ ಆದೇಶ ನೀಡಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎರಡು ವರ್ಷಗಳಿಂದ ಅನುಮೋದನೆ ಬಂದಂತಹ ಕಡತಗಳಿಗೆ ಅನುಮೋದನೆ ನೀಡದೆ ಹಾಗೇ ಬಿಟ್ಟಿದ್ದಾರೆ. ಈ ಕಡತಗಳಿಗೆ ಕೂಡಲೇ ಅನುಮೋದನೆ ಕೊಡಬೇಕು. ಅಲ್ಲದೆ, ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿಗಳಲ್ಲಿರುವಇಎಫ್ಎಂಎಸ್ನಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಜಿಲ್ಲಾ ಪಂಚಾಯ್ತಿಗೆ ತರಿಸಿಕೊಂಡು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಪಂಚಾಯ್ತಿಗಳಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ 14ನೇ ಹಣಕಾಸಿನಲ್ಲಿ ಶೇ 10 ಹಾಗೂ ವಸೂಲಾತಿಯಲ್ಲಿ ಶೇ.40ರಷ್ಟು ವೇತನವನ್ನು ಬಟವಾಡೆ ಮಾಡಿದ್ದರ ಬಗ್ಗೆ ಮಾಹಿತಿ ತರಿಸಿಕೊಂಡು ವಿಚಾರಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದರು.
ಕಿರುಕುಳ ತಪ್ಪಿಸಲು ಮನವಿ:ಪಂಚಾಯ್ತಿಗಳಲ್ಲಿ ಸಿಬ್ಬಂದಿ ಮೇಲೆ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಈ ಕಿರುಕುಳವನ್ನು ತಪ್ಪಿಸುವಂತೆ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಸೂಚಿಸಿಬೇಕು ಎಂದು ಒತ್ತಾಯಿಸಿದರು.
ಪಂಚಾಯ್ತಿ ಸಿಬ್ಬಂದಿಯ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ನೀಡಬೇಕು. ಈ ವೇತನದಿಂದಲೇ ಕುಟುಂಬದ ನಿರ್ವಹಣೆ ಹೊಂದಿದ್ದು, ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಬಸವರಾಜ ಭೋವಿ, ಅಂದಾನಪ್ಪ ಹೆಬಸೂರ, ಜಗದೀಶ್ ಕೋಟಿ, ಪರಮೇಶ ಪುರದ, ಅಜ್ಜಪ್ಪ ಬಾರ್ಕಿ, ಕುಮಾರ ಮಾಳಗಿ, ಶ್ರೀಕಾಂತ ಮಣ್ಣೂರ ಇದ್ದರು.