ಮಾಕನೂರು (ಕುಮಾರಪಟ್ಟಣ): ‘ರೈತರು ಒಟಿಎಸ್(ಏಕತಿರುವಳಿ ಸಾಲ) ಸೌಲಭ್ಯಕ್ಕಾಗಿ ಒತ್ತಾಯಿಸಿ 29 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಮತ್ತು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಪೂರ್ಣ ಬೆತ್ತಲೆ ಧರಣಿ ಕೂರುತ್ತೇವೆ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಹಲಗೇರಿ ಎಚ್ಚರಿಕೆ ನೀಡಿದರು.
ಕುಮಾರಪಟ್ಟಣ ಸಮೀಪದ ಮಾಕನೂರು ಗ್ರಾಮದಲ್ಲಿ ಒಟಿಎಸ್ ಸೌಲಭ್ಯಕ್ಕಾಗಿ ಒತ್ತಾಯಿಸಿ, ಬುಧವಾರ ರೈತರು ಅರೆಬೆತ್ತಲೆ ಮೆರವಣಿಗೆ ನಡೆಸಿದ ಸಂದರ್ಭ ಅವರು ಮಾತನಾಡಿದರು.
ಇಲ್ಲಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಅಧಿಕಾರಿಗಳು ಬ್ಯಾಂಕಿನ ವಹಿವಾಟು ಹೆಚ್ಚಿಸಲು ಹೋಗಿ ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ್ದಾರೆ. ರೈತರಿಗೆ ಸೂಕ್ತ ಮಾರ್ಗದರ್ಶನ ನೀಡದೆ ಒಟಿಎಸ್ ಸೌಲಭ್ಯದಿಂದ ಸಾವಿರಾರು ರೈತರನ್ನು ವಂಚಿತರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ, ದಿನಗೂಲಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕೊಂಗಿ, ವಕೀಲ ಎಸ್.ಡಿ. ಹಿರೇಮಠ ಸೇರಿದಂತೆ ನೂರಾರು ರೈತರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.