ಹಾವೇರಿ: ರೈತ ವಿರೋಧಿ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ‘ಕರ್ನಾಟಕ ಬಂದ್’ ಅಂಗವಾಗಿ ನಗರದಲ್ಲಿ ಸೋಮವಾರ ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ಮುರುಘಾ ಮಠದಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಹೊಸಮನಿ ಸಿದ್ದಪ್ಪ ವೃತ್ತವನ್ನು ತಲುಪಿತು. ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡಿದ್ದ ರೈತರು, ತಿದ್ದುಪಡಿ ಮಸೂದೆಗಳು ರೈತರ ಪಾಲಿಗೆ ಮರಣ ಶಾಸನಗಳಾಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಬಂಡವಾಳಶಾಹಿ ಮತ್ತು ಕಾರ್ಪೊರೇಟ್ ವಲಯದ ಪರ ನಿಂತು, ರೈತರ ಹಿತವನ್ನು ಬಲಿ ಕೊಡುತ್ತಿದೆ. ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಖಾಸಗೀಕರಣ ತಿದ್ದುಪಡಿ ಕಾಯ್ದೆಗಳಿಂದ ಅನ್ನದಾತರು ಬೀದಿಪಾಲಾಗಲಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.