ಹಾವೇರಿ: ಹಲವು ವಿನಾಯಿತಿಗಳ ನಡುವೆ ಕೋವಿಡ್ ನಿರ್ಬಂಧ ಜಿಲ್ಲೆಯಲ್ಲಿ ಮುಂದುವರಿದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 17ರವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಅದರಂತೆ ಈ ಕೆಳಕಂಡ ಚಟುವಟಿಕೆಗಳನ್ನು ನಿಯಂತ್ರಿಸಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್ಗಳನ್ನು ಹೊರತುಪಡಿಸಿ ಅಂತರರಾಜ್ಯ ಬಸ್ಗಳ ಸಂಚಾರವನ್ನು ನಿಷೇಧಿಸಿದೆ. ತುರ್ತು ವೈದ್ಯಕೀಯ ಕಾರಣ ಹಾಗೂ ಇತರೆ ಚಟುವಟಿಕೆಗೆ ಸಂಬಂಧಿಸಿದಂತೆ ಅಂತರರಾಜ್ಯಕ್ಕೆ ಪ್ರಯಾಣಿಸಲು ಕಡ್ಡಾಯವಾಗಿ ಅನುಮತಿ ಪಡೆಯತಕ್ಕದ್ದು. ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳನ್ನು ಹಾಗೂ ಶೈಕ್ಷಣಿಕ ತರಬೇತಿ ಸಂಸ್ಥೆಗಳನ್ನು ತೆರೆಯುವುದನ್ನು ನಿರ್ಬಂಧಿಸಲಾಗಿದೆ. ಆದಾಗ್ಯೂ ಆನ್ಲೈನ್ ಮೂಲಕ ತರಬೇತಿ ಶಿಕ್ಷಣ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಕೋವಿಡ್-19 ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೆ ಹಾಗೂ ಪ್ರವಾಸಿಗರಿಗೆ ಹಾಗೂ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳಿಗೆ ಮೀಸಲಿಸಿರುವ ಅತಿಥಿಗೃಹಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅತಿಥಿ ಗೃಹಗಳು, ಲಾಡ್ಜ್, ರೆಸಾರ್ಟ್ಗಳು, ಹೋಮ್ ಸ್ಟೇಗಳನ್ನು ತೆರೆಯುವುದನ್ನು ನಿಷೇಧಿಸಿದೆ. ಚಿತ್ರಮಂದಿರ, ಎಲ್ಲಾ ರೀತಿಯ ಕ್ಲಬ್ಗಳು, ನಾಟಕ ಪ್ರದರ್ಶನ, ಶಾಪಿಂಗ್ ಮಾಲ್ಗಳನ್ನು, ಜಿಮ್ ಸೆಂಟರ್, ಬೇಸಿಗೆ ಶಿಬಿರ, ಕ್ರೀಡಾ ಸಮುಚ್ಚಯ, ಈಜುಕೊಳ, ಮಜರಂಜನಾ ಪಾರ್ಕ್, ಬಾರ್, ಆಡಿಟೋರಿಯಂ ತೆರೆಯುವುದನ್ನು ಹಾಗೂ ಸಮಾರಂಭಗಳಲ್ಲಿ ಜನ ದಟ್ಟಣೆ ಸೇರುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸಿದೆ.
ಜಿಲ್ಲೆಯಲ್ಲಿನ ಎಲ್ಲಾ ಧಾರ್ಮಿಕ ಸ್ಥಳಗಳಿಗೆ, ಪ್ರಾರ್ಥನಾ ಮಂದಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಧಾರ್ಮಿಕ ಸಭೆಗಳನ್ನು ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ತುರ್ತು ಸಂದರ್ಭಗಳಲ್ಲಿ ಹೊರತುಪಡಿಸಿ ಸಂಜೆ 7ರಿಂದ ಬೆಳಿಗ್ಗೆ 7 ಗಂಟೆವರೆಗೆ ಎಲ್ಲಾ ಸಾರ್ವಜನಿಕರ ಓಡಾಟವನ್ನು ನಿಷೇಧಿಸಿದೆ. 65 ವರ್ಷ ಮೇಲಿನ ವಯೋಮಾನದ ವ್ಯಕ್ತಿಗಳು, ಅಸ್ವಸ್ಥ ವ್ಯಕ್ತಿಗಳು, ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು ತುರ್ತು ಸಂದರ್ಭವನ್ನು ಹೊರತುಪಡಿಸಿ ಅನವಶ್ಯಕವಾಗಿ ಮನೆಯಿಂದ ಹೊರಬರುವುದನ್ನು ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.