ಶಿವಮೊಗ್ಗ: ‘ರಾಜ್ಯ ಹಾಳುಮಾಡಿದ ಲೂಟಿಕೋರರನ್ನು ತನ್ನ ಸುತ್ತ ಇಟ್ಟುಕೊಂಡು ಓಡಾಡುವ ರಾಹುಲ್ ಗಾಂಧಿ, ಕಳಂಕಿತರನ್ನೆಲ್ಲ ಮೋದಿ ವಿಧಾನಸಭೆಗೆ ಕಳುಹಿಸುತ್ತಿದ್ದಾರೆ ಎನ್ನುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುಟುಕಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಆತನ ಹೇಳಿಕೆಗೆ ಒತ್ತು ನೀಡುವ ಅಗತ್ಯವಿಲ್ಲ. ಯಾರ ಬಗ್ಗೆ ಹೇಗೆ ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನವೂ ಅವರಿಗಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಹಗಲು ದರೋಡೆ ನಡೆಸಿದೆ. ಅದು ರಾಹುಲ್ ಗಾಂಧಿಗೆ ತಿಳಿದಿಲ್ಲವೇ?’ ಎಂದು ತಿರುಗೇಟು ನೀಡಿದರು.
ರಾಜ್ಯದ 224 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಇದು ಚುನಾವಣಾ ಸಮಯದಲ್ಲಿ ಒಳ್ಳೆಯ ಬೆಳವಣಿಗೆ ಎಂದರು.