ಹಾವೇರಿ: ‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದ್ದರೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಹೋಂ ಐಸೋಲೇಷನ್ನಲ್ಲಿ ಇರುವವರ ಮೇಲೆ ತೀವ್ರ ನಿಗಾವಹಿಸಿ. ಪ್ರತ್ಯೇಕ ವೈದ್ಯರನ್ನು ನೇಮಕ ಮಾಡಿ ನಿಯಮಿತವಾಗಿ ತಪಾಸಣೆ ನಡೆಸಿ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸಲಹೆ ನೀಡಿದರು.
ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದೊಂದಿಗೆ ಬೆಂಗಳೂರಿನಿಂದ ವಿಡಿಯೊ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ನಿಯಂತ್ರಣ ಕ್ರಮಗಳು ಹಾಗೂ ಪ್ರಸ್ತುತ ಮಳೆಯ ಸ್ಥಿತಿಗತಿ ಬೆಳೆ ಹಾನಿ ಪರಿಹಾರ ಕ್ರಮಗಳು, ಮತದಾರರ ನೋಂದಣಿ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೋವಿಡ್ ಸಹಾಯವಾಣಿ ಆರಂಭಿಸಿ, ಕೋವಿಡ್ ಕುರಿತಂತೆ ಪಾಸಿಟಿವ್ ವ್ಯಕ್ತಿಗಳಿಗೆ ವೈದ್ಯಕೀಯ ಸಲಹೆಗಳನ್ನು ನೀಡಿ ಹಾಗೂ ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಅನುದಾನದ ಬೇಡಿಕೆ ಸಲ್ಲಿಸಲು ತಿಳಿಸಿದರು.
ಪ್ರಸ್ತುತ ಮಳೆಯ ಸ್ಥಿತಿಗತಿ ಹಾಗೂ ಬೆಳೆ ಹಾನಿ ಮಾಹಿತಿಯನ್ನು ಪಡೆದುಕೊಂಡರು. ಕಳೆದ ಆಗಸ್ಟ್ ತಿಂಗಳಲ್ಲಿ ಮಳೆ ಹಾಗೂ ನೆರೆಯಿಂದ ಹಾನಿಯಾದ ಬೆಳೆ ನಷ್ಟದ ವಿವರವನ್ನು ತ್ವರಿತವಾಗಿ ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಸೂಚನೆ ನೀಡಿದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಪ್ರಕ್ರಿಯೆ ಕುರಿತಂತೆ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು, ಹೊಸ ಮತದಾರರ ನೊಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಈ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಇದ್ದರು.