ಹಾವೇರಿ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ಜನತೆ ಹಾಗೂ ದೇಶವನ್ನು ಕೋವಿಡ್ -19 ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ಅದಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಮತ್ತು ಜನದ್ರೋಹಿ ತಿದ್ದುಪಡಿ ಕಾಯ್ದೆಗಳುಹಾಗೂ ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿ ಕುಟುಂಬಗಳಿಗೆ ಮಾಸಿಕ ₹7,500 ನೆರವು ಘೋಷಿಸಬೇಕು. ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು. ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ ₹600ಕ್ಕೆ ಹೆಚ್ಚಿಸಬೇಕು. ಆರೋಗ್ಯ ಸುರಕ್ಷತಾ ಸಾಮಾಗ್ರಿಗಳ ಕಿಟ್ ಅನ್ನು ಒದಗಿಸಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ಮಾಸಿಕ ₹10 ಸಾವಿರ ಒದಗಿಸಬೇಕು ಎಂದು ಆಗ್ರಹಿಸಿದರು.