ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ಸಿಇಟಿ: ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ

ಮೇ 21 ಮತ್ತು 22ರಂದು ಶಿಕ್ಷಕರ ನೇಮಕಾತಿ ಸಿಇಟಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ
Last Updated 17 ಮೇ 2022, 14:35 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ (ಸಿಇಟಿ) ನಡೆಯಲಿವೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪಾರದರ್ಶಕ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಿಇಟಿ ಪರೀಕ್ಷೆಗೆ ಒಟ್ಟು 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಿಸಲಾಗುತ್ತಿದೆ. ಅಲ್ಲದೇ ಪರೀಕ್ಷಾರ್ಥಿಗಳು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ಕೈಗಡಿಯಾರ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್ ಪೂರೈಸುವುದು. ಕೋವಿಡ್ ರೋಗ ಲಕ್ಷಣವಿರುವ ಅಭ್ಯರ್ಥಿಗಳಿಗೆ ಪಲ್ಸ್ ಆಕ್ಸಿಮೀಟರ್ ನಿಂದ ಆಕ್ಸಿಜನ್ ಲೆವೆಲ್ ಪರೀಕ್ಷಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿಯೋಜಿತ ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ನೀಡಲು ಸೂಚಿಸಿದರು.

ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಮೇಲುಸ್ತುವಾರಿಗಾಗಿ ತ್ರಿ-ಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಗೋಪ್ಯ ಸಾಮಗ್ರಿಗಳ ಅಭಿರಕ್ಷೆ, ವಿತರಣಾ ಸಮಿತಿ ಸಹ ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ, ಸಿಟಿಂಗ್ ಸ್ಕ್ವಾಡ್, ಪರೀಕ್ಷಾ ಕೇಂದ್ರದ ನಿಯಂತ್ರಣಾಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ಮತ್ತು ಮೊಬೈಲ್ ಸ್ವಾಧೀನಾಧಿಕಾರಿಗಳು, ಪರೀಕ್ಷಾ ಕೇಂದ್ರಕ್ಕೆ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.

ಶಿಕ್ಷಣ ಇಲಾಖೆ ಪ್ರಾಜೆಕ್ಟ್‌ ಕೋರ್ಡಿನೆಟರ್ ಶ್ಯಾಮಸುಂದರ ಅಡಿಗ ಮಾತನಾಡಿ, ಮೇ 21ರಂದು ಪ್ರಥಮ ಅಧಿವೇಶನಕ್ಕೆ 1924, ದ್ವಿತೀಯ ಅಧಿವೇಶನದಲ್ಲಿ 199 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೇ 22ರಂದು ಪ್ರಥಮ ಹಾಗೂ ದ್ವಿತೀಯ ಅಧಿವೇಶನಕ್ಕೆ 1834 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲ್ಲಿದ್ದು ಬೆಳ್ಳಗೆ 10 ಗಂಟೆ ಯಿಂದ 11 ಗಂಟೆ ಮತ್ತು ಮಧ್ಯಾಹ್ನ ಗಂಟೆ 2.30ರಿಂದ 5.30ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT