ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ‘ಜಾನಪದ ಜಾತ್ರೆ’ ಇಂದಿನಿಂದ

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಅಖಾಡ, ವೇದಿಕೆ ಸಿದ್ಧತೆ ಪೂರ್ಣ
Last Updated 10 ಫೆಬ್ರುವರಿ 2020, 15:25 IST
ಅಕ್ಷರ ಗಾತ್ರ

ಹಾವೇರಿ: ಇಂದಿನಿಂದ ಮೂರು ದಿನ ನಡೆಯುವ ‘ಜಾನಪದ ಜಾತ್ರೆ’ ಕಾರ್ಯಕ್ರಮಕ್ಕೆ ಹಾವೇರಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಜಾನಪದ ಜಾತ್ರೆ’ ಕಾರ್ಯಕ್ರಮ ಫೆ.11, 12 ಹಾಗೂ 13 ರಂದು ನಡೆಯಲಿದೆ. ಫೆಬ್ರುವರಿ 11ರ ಮೊದಲ ದಿನ ಜಿಲ್ಲಾ ಜಾನಪದ ಜಾತ್ರೆ ಹಾಗೂ ಫೆ.13 ರಂದು ರಾಜ್ಯ ಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮ ನಡೆಯಲಿದೆ.

ಫೆ.11ರಂದು ಮಧ್ಯಾಹ್ನ 3 ಗಂಟೆಗೆಯಿಂದ ಜಾನಪದ ಸ್ಪರ್ಧೆಗಳು ಆರಂಭಗೊಳ್ಳಲಿವೆ. ಮೊದಲ ದಿನ ಸೋಬಾನೆ ಪದಗಳ ಸ್ಪರ್ಧೆಗಳು ಜರುಗಲಿವೆ. ಸಂಜೆ 5 ಗಂಟೆಗೆ ಜಿಲ್ಲಾ ಮಟ್ಟದ ಜಾನಪದ ಜಾತ್ರೆ ಉದ್ಘಾಟನಾ ಸಮಾರಂಭ, ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರು, ಶಾಲಾ ಮಕ್ಕಳು, ಯುವಕ ಮಂಡಳಗಳಿಂದ ಜಾನಪದ ಕಲಾ ಪ್ರದರ್ಶನ ಜರುಗಲಿವೆ.

ಫೆ.13ರಂದು ಮಧ್ಯಾಹ್ನ 3 ಗಂಟೆಗೆ ಭಜನಾ ಸ್ಪರ್ಧೆ, ಸಂಜೆ 6 ಗಂಟೆಗೆ ಸ್ಥಳೀಯ ಕಲಾವಿದರು, ಶಾಲಾ ಮಕ್ಕಳು, ಯುವಕ ಮಂಡಳಗಳಿಂದ ಜಾನಪದ ಕಲಾ ಪ್ರದರ್ಶನ ನಡೆಯಲಿವೆ.

ಫೆ.13ರಂದು ಮಧ್ಯಾಹ್ನ 2 ಗಂಟೆಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪುರಸಿದ್ಧೇಶ್ವರ ಕುಸ್ತಿ ಕಮಿಟಿ ಸಹಯೋಗದಲ್ಲಿ ಭಾರಿ ಬಯಲು ಜಂಗಿ ಕುಸ್ತಿಗಳು ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇಳೈಸಲಿವೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಮುರುಘರಾಜೇಂದ್ರ ಮಠದಿಂದ ಜಾನಪದವಾಹಿನಿ ಆರಂಭಗೊಂಡು ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ. ಸಂಜೆ 5 ಗಂಟೆಗೆ ರಾಜ್ಯ ಮಟ್ಟದ ಜಾನಪದ ಜಾತ್ರೆ ಉದ್ಘಾಟನಾ ಸಮಾರಂಭ, ಸಂಜೆ 6 ಗಂಟೆಗೆ ರಾಜ್ಯದ ವಿವಿಧ ಜಾನಪದ ಕಲಾತಂಡಗಳಿಂದ ಕಲಾ ಪ್ರದರ್ಶನಗಳು ಜರುಗಲಿವೆ.

ವಿಶೇಷ ಆಕರ್ಷಣೆ:

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಂದ ವಿವಿಧ ಜಾನಪದ ಕಲಾ ಪ್ರದರ್ಶನ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಕುಸ್ತಿ ಪಂದ್ಯಾವಳಿ, ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರಿಂದ ಕುಂಭ ಮೆರವಣಿಗೆ ಹಾಗೂ ರಂಗೋಲಿ ಪ್ರದರ್ಶನ ಆಯೋಜಿಸಲಾಗಿದೆ.

ಉದ್ಘಾಟನಾ ಕಾರ್ಯಕ್ರಮ:

ಫೆ.11ರಂದುಜಾನಪದ ಜಾತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಸಚಿವರಾದ ಬಿ.ಸಿ.ಪಾಟೀಲ ಅವರು ಭಾಗವಹಿಸಲಿದ್ದು, ಶಾಸಕರಾದ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಯು.ಬಿ. ಬಣಕಾರ, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಶಾಸಕರಾದ ಸಿ.ಎಂ.ಉದಾಸಿ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರು (ಪೂಜಾರ), ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಬ್ಯಾಲದಹಳ್ಳಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಕಮಲವ್ವ ಹೇಮನಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ ಸಂಗೂರು ಅವರು ಪಾಲ್ಗೊಳ್ಳಲಿದ್ದಾರೆ.

ಹುಕ್ಕೇರಿಮಠದ ಸದಾಶಿವ ಶ್ರೀಗಳು, ಹೊಸಮಠದ ಬಸವಶಾಂತಲಿಂಗ ಶ್ರೀಗಳು, ಹರಸೂರು ಬಣ್ಣದಮಠದ ರುದ್ರಚನ್ನಮಲ್ಲಿಕಾರ್ಜುನ ಶ್ರೀಗಳು ಹಾಗೂ ಗೌರಿಮಠದ ಶಿವಯೋಗಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT