ಹಾವೇರಿ: ಪಕ್ಷಬಿಟ್ಟು ಹೋದ ನಾಯಕರನ್ನು ಮತ್ತೆ ಕರೆತಂದು, ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಜೆಡಿಎಸ್ ನೂತನ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಲಗೇರಿ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ನಾಯಕರಾದ ಬಸವರಾಜ ಹೊರಟ್ಟಿ ಮತ್ತು ಕೋನರೆಡ್ಡಿ ಅವರ ಸಮಕ್ಷಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಜಿಲ್ಲೆಯ ಎಂಟು ತಾಲ್ಲೂಕು ಘಟಕಗಳ ಅಧ್ಯಕ್ಷರ ಒಕ್ಕೊರಲ ಬೆಂಬಲ ಸಿಕ್ಕಿದೆ. ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಮಾಕನೂರು ಗ್ರಾ.ಪಂ. ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ.ರೈತ ಸಂಘದಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. 2018ರಲ್ಲಿ ರಾಣೆಬೆನ್ನೂರು ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷನಾಗಿದ್ದೆ. ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಈಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬಿಜೆಪಿ ಅಧೋಗತಿಗೆ ಇಳಿಯುತ್ತಿದೆ. ಕಾಂಗ್ರೆಸ್ ಮಣ್ಣು ಮುಕ್ಕಿದೆ. ಜನಪರ ಹೋರಾಟಗಳ ಮೂಲಕ ಜೆಡಿಎಸ್ ಅಸ್ತಿತ್ವವನ್ನು ಸಾಬೀತುಪಡಿಸಲಾಗುವುದು ಎಂದರು. ಜೆಡಿಎಸ್ ಮುಖಂಡರಾದ ಕೆ.ಎಂ.ಸುಣಗಾರ, ಆರ್.ಬಿ.ಪಾಟೀಲ, ಶಿವಕುಮಾರ ಮಠದ್, ಶಂಕರಪ್ಪ ಹಾದಿಮನಿ ಇದ್ದರು.