ಬಾಲಕಿ ಕೊಲೆ: ಆರೋಪಿಗೆ ಗಲ್ಲುಶಿಕ್ಷೆ

ಹಾವೇರಿ: ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಕೊಲೆ ಮಾಡಿದ್ದ ಆರೋಪಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಈ. ರಾಜೀವಗೌಡ ಅವರು ಮರಣದಂಡನೆ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿ ಗುರುವಾರ ಆದೇಶ ನೀಡಿದ್ದಾರೆ.
ಸವಣೂರ ತಾಲ್ಲೂಕಿನ ಮಣ್ಣೂರ ಗ್ರಾಮದ ಮಂಜುನಾಥಗೌಡ@ ಶಶಿ ಪಾಟೀಲ (26) ಎಂಬ ಆರೋಪಿಯು 2018ರ ಆಗಸ್ಟ್ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ, ಅತ್ಯಚಾರ ಎಸಗಿದ್ದ. ಕೊಲೆ ಮಾಡಿದ ನಂತರ ಶವವನ್ನು ಕಾರಿನಲ್ಲಿ ಸಾಗಿಸಿ, ಹಾವೇರಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಬರುವ ವರದಾ ಸೇತುವೆ ಕೆಳಗೆ ಶವವನ್ನು ಸುಟ್ಟು ಹಾಕಿದ್ದ. ಈ ಪ್ರಕರಣ ಜಿಲ್ಲೆಯಾದ್ಯಂತ ದೊಡ್ಡ ಸುದ್ದಿಯಾಗಿತ್ತು.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಸಿಪಿಐ ಬಾಸು ಚೌಹಾಣ್ ತನಿಖೆ ನಡೆಸಿ, ಆರೋಪಿನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪಿಯು ₹1.50 ಲಕ್ಷ ಪರಿಹಾರವನ್ನು ಸಂತ್ರಸ್ತೆಯ ಕುಟುಂಬಕ್ಕೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.