ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ರಾಜೀನಾಮೆಗೆ ವಿಧಾನಸಭೆಯ ಮಾಜಿ ಸ್ಪೀಕರ್‌ ಕೋಳಿವಾಡ ಆಗ್ರಹ

Last Updated 13 ಏಪ್ರಿಲ್ 2022, 13:47 IST
ಅಕ್ಷರ ಗಾತ್ರ

ಹಾವೇರಿ: ಗುತ್ತಿಗೆದಾರ ಸಂತೋಷ್‌ ಪಾಟೀಲ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ಇಲ್ಲದಿದ್ದರೆ, ಕಾಂಗ್ರೆಸ್‌ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಕೂರುತ್ತೇವೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ ಎಚ್ಚರಿಕೆ ನೀಡಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಡೆತ್‌ ನೋಟ್‌ನಲ್ಲಿ ಸಂತೋಷ್‌ ಪಾಟೀಲ ಅವರ ಸಹಿ ಇಲ್ಲ ಎಂದು ಹೇಳುತ್ತಾ, ರಾಜೀನಾಮೆ ಕೊಡುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಪೊಲೀಸರು ಸರಿಯಾದ ಸೆಕ್ಷನ್‌ಗಳನ್ನು ಹಾಕಿಲ್ಲ, ಜತೆಗೆ ಮುಂದಿನ ದಿನಗಳಲ್ಲಿ ಬಿ–ರಿಪೋರ್ಟ್‌ ಸಲ್ಲಿಸಿ, ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಕಾಣುತ್ತಿದೆ ಎಂದು ಆರೋಪಿಸಿದರು.

ಈಶ್ವರಪ್ಪ ಅವರ ಮೌಖಿಕ ಒಪ್ಪಿಗೆಯ ಮೇರೆಗೆ ಸಂತೋಷ್‌ ಪಾಟೀಲ ₹4 ಕೋಟಿಯ ಕಾಮಗಾರಿ ಮಾಡಿದ್ದರು. ಅನುದಾನ ಬಿಡುಗಡೆಗೆ ಶೇ 40ರಷ್ಟು ಕಮಿಷನ್‌ ಕೇಳುತ್ತಿದ್ದಾರೆ ಎಂದು ಸಂತೋಷ್‌ ಅವರು ರಾಷ್ಟ್ರಪತಿ, ಪ್ರಧಾನಿ, ಮೋದಿ ಅವರಿಗೆ ಪತ್ರ ಬರೆದಿದ್ದರು. ನ್ಯಾಯ ಸಿಗದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ‘ಟೆನ್‌ ಪರ್ಸೆಂಟ್‌’ ಸರ್ಕಾರ ಎಂದು ಟೀಕಿಸಿದ್ದರು. ಈಗ ಅವರದೇ ಪಕ್ಷದ ರಾಜ್ಯ ಸರ್ಕಾರದ ಸಚಿವರು ಶೇ 40ರಷ್ಟು ಕಮಿಷನ್‌ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರು ಪತ್ರ ಬರೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಶೇ 10ರಷ್ಟು ಕಮಿಷನ್‌ ಕೊಟ್ಟ ನಂತರವೇ ಅನುದಾನ ಬಿಡುಗಡೆ ಮಾಡುವ ಸಂಪ್ರದಾಯವಿದೆ ಎಂದು ಜರಿದರು.

ತೈಲ ಉತ್ಪನ್ನ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ಇದನ್ನು ಮರೆಮಾಚಲು ಧಾರ್ಮಿಕ ಭಾವನೆಗಳನ್ನು ಕೆರಳಿಸಿಕೋಮು ಸೌಹಾರ್ದ ಹಾಳುಗೆಡವುತ್ತಿದ್ದಾರೆ. ರೈತ ವಿರೋಧಿ ಮತ್ತು ಬಡವರ ವಿರೋಧಿಯಾಗಿರುವ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಮುಖಂಡರಾದ ಎಂ.ಎಂ.ಮೈದೂರ, ಎಸ್‌.ಎಫ್‌.ಎನ್‌.ಗಾಜೀಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT