ಹಾವೇರಿ:ಕಾರ್ಮಿಕರಿಗೆ ಘೋಷಿಸಿರುವ ₹5 ಸಾವಿರ ಕೋವಿಡ್ ಪರಿಹಾರ ಕೆಲವು ಫಲಾನುಭವಿಗಳಿಗೆ ಸಿಕ್ಕಿಲ್ಲ. ಶೀಘ್ರವೇ ಅವರ ಖಾತೆಗಳಿಗೆ ಜಮೆ ಮಾಡಬೇಕು. ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದುಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಷನ್ (ಸಿಐಟಿಯು) ವತಿಯಿಂದ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಕಾರ್ಮಿಕ ಕಚೇರಿಗಳಲ್ಲಿ ನಡೆಯುವ ಲಂಚಗುಳಿತನ ಹಾಗೂ ನಕಲಿ ಏಜೆಂಟರ ಹಾವಳಿ ತಡೆಯಬೇಕು. ಕೋವಿಡ್ ಹಿನ್ನೆಲೆಯಲ್ಲಿ ವಿವಾಹ ಸಹಾಯಧನ, ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು ಮತ್ತು ವಿವಿಧ ಸಹಾಯಧನಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಸೇವಾಸಿಂಧು ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಪ್ರತಿ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿ ತೆರೆಯಬೇಕುಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಹಾನಗಲ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ ಚಿಕ್ಕಣ್ಣನವರ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಮಾಲತೇಶ ತಳಗೇರಿ ಇದ್ದರು.