ಹಾನಗಲ್: ‘ಹಾನಗಲ್ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬುದಾಗಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಒತ್ತಾಯಿಸಲಾಗಿದೆ’ ಎಂದು ಮಾಜಿ ಸಚಿವ ಮನೋಹರ ತಹಸೀಲ್ದಾರ್ ಹೇಳಿದರು.
ಕಳೆದ ಸಾರ್ವತ್ರಿಕ ಚುನವಣೆ ವೇಳೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಇದು ಪುನರಾವರ್ತನೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ನಿಯೋಗದ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕಳೆದ ಚುನಾವಣೆಯಲ್ಲಿ ಹೊರಗಿನ ಅಭ್ಯರ್ಥಿಗೆ ಮಣೆ ಹಾಕಿದ್ದರಿಂದ ನಮ್ಮ ವಿರೋಧಕ್ಕೆ ಅಂದು ಹೈಕಮಾಂಡ್ ಸ್ಪಷ್ಟನೆ ನೀಡಿತ್ತು. ಈ ಬಾರಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಮುಂದಿನ ಬಾರಿ ಸ್ಥಳೀಯರಿಗೆ ಅವಕಾಶ ಮಾಡಿಕೊಡುತ್ತೇವೆ ಎಂಬ ಭರವಸೆ ಸಿಕ್ಕಿತ್ತು’ ಎಂದರು.
‘ಈಗ ವರಿಷ್ಠರನ್ನು ಭೇಟಿ ಮಾಡಿ ಅಂದು ನೀಡಿದ್ದ ಭರವಸೆಯನ್ನು ನೆನಪು ಮಾಡಿಕೊಡಲಾಗಿದೆ. ಸೂಕ್ತ ಎನ್ನಿಸುವ ಸ್ಥಳೀಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದೇವೆ. ನಮ್ಮ ನಾಯಕರು ಸ್ಪಂದಿಸಿದ್ದಾರೆ. ಸದ್ಯ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ನಮ್ಮ ಕ್ಷೇತ್ರದವರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂಬ ಒಂದು ಅಂಶದ ಒತ್ತಾಯವನ್ನು ವರಿಷ್ಠರ ಮುಂದಿಟ್ಟಿದ್ದೇವೆ. ಹೈಕಮಾಂಡ್ ಮೇಲೆ ಒತ್ತಡ ತರುವ ರೂಪರೇಷಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.