ಹಾವೇರಿ: ‘ಚರ್ಮಗಂಟು ರೋಗದಿಂದ ಮೃತಪಟ್ಟ ಹಸುವಿಗೆ ₹20 ಸಾವಿರ ಹಾಗೂ ಎತ್ತುಗಳಿಗೆ ₹30 ಸಾವಿರ ಪರಿಹಾರ ನೀಡುತ್ತೇವೆ. ರೋಗದಿಂದ ಬಳಲುತ್ತಿರುವ ರಾಸುಗಳ ವೈದ್ಯಕೀಯ ವೆಚ್ಚ, ಔಷಧವನ್ನುಸರ್ಕಾರವೇ ನೀಡಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬ್ಯಾಡಗಿ ತಾಲ್ಲೂಕು ಅರಬಗೊಂಡ ಗ್ರಾಮದಲ್ಲಿ ಹಾವೇರಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಸರ್ಕಾರದ ನೆರವಿನಿಂದ ನಿರ್ಮಿಸಲು ಉದ್ದೇಶಿಸಿರುವ ₹ 70 ಕೋಟಿ ವೆಚ್ಚದ ಮೆಗಾ ಡೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
‘ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ರಾಸುಗಳ ಸಾವಿನ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಪರಿಹಾರ ನೀಡುವುದಾಗಿ ಹೇಳಿದ್ದೆ’ ಎಂದು ಅವರು ತಿಳಿಸಿದರು.
ಹಾಲು ಉತ್ಪಾದಕರಿಗಾಗಿಯೇ ದೇಶ ದಲ್ಲಿ ಪ್ರಥಮವಾಗಿ ಕರ್ನಾಟಕದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಎಂದು ಹೇಳಿದರು.