ಹಾವೇರಿ: ‘ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಕಂಡುಬರುವ ರಕ್ತಹೀನತೆಯನ್ನು ಹೋಗಲಾಡಿಸಲು ಪೋಷಣ ಅಭಿಯಾನ ಯೋಜನೆ ಬಹಳ ಸಹಕಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಾಲಭವನ ಸಭಾಂಗಣದಲ್ಲಿ ಬುಧವಾರ ನಡೆದ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಮಟ್ಟದ ಎರಡು ದಿನಗಳ ಐ.ಎಲ್.ಎ. ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ ನಡೆಸಿ, ರಕ್ತ ಹೀನತೆಯನ್ನು ಹೋಗಲಾಡಿಸಬೇಕು ಹಾಗೂ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ.ಶೆಟ್ಟೆಪ್ಪನವರ ಅವರು ಪೋಷಣ ಅಭಿಯಾನ ಯೋಜನೆ ಕುರಿತು ವಿವರಿಸಿದರು.
ಪೋಷಣ ಅಭಿಯಾನದ ರಾಜ್ಯ ಸಂಪನ್ಮೂಲ ತಂಡದ ಸದಸ್ಯರಾದ ಅಪ್ಪಣ್ಣ ಹೆಗಡೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಹಾನಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ ಕುಮಾರ ಎಚ್. ಹಾಗೂ ಬಿಂದು ಕೆಂಚಿಮಠ ಇದ್ದರು.