ಹಿರೇಕೆರೂರು: ನೂತನವಾಗಿ ಪ್ರಾರಂಭವಾದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳ ಆದೇಶದ ಮೇರೆಗೆ ಸ್ಥಾನಿಕ ತನಿಖಾ ಸಮಿತಿಯವರು ಪಟ್ಟಣದ ಬಿ.ಆರ್.ತಂಬಾಕದ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ಒಪ್ಪಿಸಿದರು.
ತನಿಖಾ ಸಮಿತಿ ಅಧ್ಯಕ್ಷ ಡಾ.ಎಚ್.ಎಚ್.ಭರಡಿ ಮಾತನಾಡಿ, ‘ವಿದ್ಯಾಲಯವು ಸುಸಜ್ಜಿತ ಕಟ್ಟಡ, ಗ್ರಂಥಾಲಯ ಹಾಗೂ ಎಲ್ಲಾ ಮೂಲ ಸೌಲಭ್ಯಗಳನ್ನು ಹೊಂದಿದೆ. ನ್ಯಾಕ್ನಿಂದ 3 ಸಾರಿ ಮಾನ್ಯತೆ ಪಡೆದ ಈ ಮಹಾವಿದ್ಯಾಲಯವು ಗ್ರಾಮಾಂತರ ಪ್ರದೇಶದಲ್ಲಿ ಸ್ನಾತಕೋತ್ತರ ಎಂ.ಕಾಂ. ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಿ ಗ್ರಾಮೀಣ ಭಾಗದವರಿಗೆ ಉನ್ನತ ಶಿಕ್ಷಣವನ್ನು ಮನೆಬಾಗಿಲಿನಲ್ಲಿಯೇ ಪಡೆಯುವಂತಹ ಭಾಗ್ಯ ಕಲ್ಪಿಸಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಿತಿ ಸದಸ್ಯ ಡಾ.ಪಿ.ಜಿ.ಪಾಟೀಲ ಮಾತನಾಡಿ, ‘ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹೊಂದಿ ಉತ್ಕೃಷ್ಟ ಮಹಾವಿದ್ಯಾಲಯವಾಗಿ ಹೊರಹೊಮ್ಮಿದೆ’ ಎಂದು ಸಂತಸ ವ್ಯಕ್ತಪಡಿಸಿದರು.
ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡಿರುತ್ತಾರೆಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ, ಗೌರವ ಕಾರ್ಯದರ್ಶಿ ಎಸ್.ಎಸ್.ಪಾಟೀಲ, ಆಡಳಿತಾಧಿಕಾರಿ ಎಸ್.ವೀರಭದ್ರಯ್ಯ ಪ್ರಾಂಶುಪಾಲ ಡಾ. ಎಸ್.ಬಿ.ಚನ್ನಗೌಡ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.