ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ‘ನಿರುದ್ಯೋಗ ದಿನ’ ಆಚರಣೆ ಮಾಡಿ, ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಒಗ್ಗೂಡಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ‘ಉದ್ಯೋಗ ಸೃಷ್ಟಿಸುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಅಧಿಕಾರದ ಗದ್ದುಗೆ ಏರಿದ ಪ್ರಧಾನಿ ಮೋದಿ ಅವರು ದೇಶದಲ್ಲಿ ನಿರುದ್ಯೋಗ ಸೃಷ್ಟಿಸಿದ್ದಾರೆ. ‘ಅಚ್ಛೇ ದಿನ್’ ತರುತ್ತೇನೆ ಎಂದು ಹೇಳಿ ಕೆಟ್ಟ ದಿನಗಳನ್ನು ತಂದು, ದೇಶದ ಸಂಪತ್ತನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಹಿರೇಮಠ ಮಾತನಾಡಿ, ‘ನರೇಂದ್ರ ಮೋದಿ ಅವರು ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇನೆಂದು ಯುವಕರನ್ನು ವಂಚಿಸಿ, ಮತವನ್ನು ಗಿಟ್ಟಿಸಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದರೂ ಕೂಡ 2 ಲಕ್ಷ ಉದ್ಯೋಗವನ್ನು ಸೃಷ್ಟಿಸಿಲ್ಲ ಎಂದು ಆರೋಪ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಎಂ.ಎಂ. ಮೈದೂರ, ಸುನಿಲ್ ಜಮಾದಾರ್, ಅಜಯ್ ಬಂಡಿವಡ್ಡರ್, ವಿಶ್ವನಾಥ್ ಕರಿಗೌಡರ, ರಾಜು ಮಾದಮ್ಮನವರ, ಉಮರ್ ಇನಾಮ್ದಾರ್, ಜಮೀರ್ ಜಿಗರಿ, ರಾಜು ಶಿವಣ್ಣನವರ ಮುಂತಾದವರು ಇದ್ದರು.