ಹಿರೇಕೆರೂರ: ‘ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ಕೆಂದ್ರ ಸರ್ಕಾರವು ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯಪೂರ್ವಕವಾಗಿ ಹೇರುತ್ತಿದೆ’ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಆರ್.ಎಚ್.ಭಾಗವಾನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ ಬಾರ್ಕಿ, ಕೇಂದ್ರ ಸರ್ಕಾರ ಹಿಂದಿಯನ್ನು ದೇಶದಲ್ಲಿ ಬೆಳಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ಸೇರಿದಂತೆ ಹಿಂದಿಯೇತರ ದ್ರಾವಿಡ ಭಾಷೆಗಳನ್ನು ಮಾತನಾಡುವ ರಾಜ್ಯಗಳಲ್ಲಿ ಸೆಪ್ಟೆಂಬರ್ 14ರಂದು ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ಕಾರ್ಯಕ್ರಮ ನಡೆಸಲು ಸೂಚಿಸುತ್ತದೆ. ಆ ಮೂಲಕ ಹಿಂದಿಯೇತರರನ್ನು ದೇಶದ ಎರಡನೇ ದರ್ಜೆಯ ಪ್ರಜೆಗಳಂತೆ ಕಾಣುತ್ತಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ದೂರಿದರು.
ಅಲ್ಲದೇ, ಕನ್ನಡಿಗರ ವಿರೋಧದ ಹೊರತಾಗಿಯೂ ನಿರಂತರವಾಗಿ ಹಿಂದಿ ಸಪ್ತಾಹ ನಡೆಯುತ್ತಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಿಂದಿ ಭಾಷೆಗೆ ಒತ್ತು ಕೊಡುವ ಮೂಲಕ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.