ಹಾವೇರಿ: ಪಕ್ಷ,ಜಾತಿ ಧರ್ಮದ ಭೇದ ಮರೆತು ನಾವೆಲ್ಲ ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಅವರು ಸಂದೇಶ ನೀಡಿದರು.
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ, ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದ ಸಮಿತಿ ದೇಶಕ್ಕೆ ಸುಭದ್ರ ಸಂವಿಧಾನ ನೀಡಿತು. ಅದು ದೇಶಕ್ಕೆ ಭದ್ರ ಬುನಾದಿ ಹಾಕಿತು. ಅದು ದೇಶದ ಐಕ್ಯತೆ ಕಾಪಾಡಿದೆ ಎಂದು ಚುಟುಕಾಗಿ ಭಾಷಣ ಪೂರ್ಣಗೊಳಿಸಿದರು.
ಸಾಮಾಜಿಕ ಕಾರ್ಯಕರ್ತೆ, ಅಂಗವಿಕಲರಾದ ಹಸೀನಾ ಹೆಡಿಯಾಲ ₹25 ಸಾವಿರ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಜನಿ ಎಲ್. ಕರಿಗಾರ ಅವರಿಗೆ ₹10 ಸಾವಿರವನ್ನು ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ನೀಡಿದರು.
ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ, ಜಿಲ್ಲಾ ಪಂಚಾಯಿತಿ ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಂ, ಜಿಲ್ಲಾ ಪಂಚಾಯಿತಿ ಸಿಇಒ ಕೆ. ಲೀಲಾವತಿ ಇದ್ದರು.