ಹಾವೇರಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಗ್ಗು ಗುಂಡಿಗಳಿಂದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಹೀಗಾಗಿ ರಸ್ತೆ ದುರಸ್ತಿ ಮತ್ತು ಚರಂಡಿಗಳ ನಿರ್ಮಾಣಕ್ಕೆ ₹10 ಕೋಟಿ ವಿಶೇಷ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಮನವಿ ಮಾಡಿದ್ದಾರೆ.
ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಚರಂಡಿಗಳು ಮತ್ತು ರಸ್ತೆಗಳು ಸಮರ್ಪಕವಾಗಿಲ್ಲದ ಕಾರಣ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಗ್ಗು ಗುಂಡಿಗಳನ್ನು ಮುಚ್ಚುವುದು ಬಹಳ ತುರ್ತು ಕೆಲಸವಾಗಿದೆ ಎಂದು ತಿಳಿಸಿದ್ದಾರೆ.
ಮಳೆ ಅವಾಂತರದಿಂದನಗರದ ವಿವಿಧೆಡೆ ರಸ್ತೆ, ಚರಂಡಿ, ಸೇತುವೆಗಳು ಶಿಥಿಲವಾಗಿರುವುದನ್ನು ಹಾಗೂ ಮನೆಗಳಿಗೆ ನೀರು ನುಗ್ಗಿರುವುದನ್ನು ಶನಿವಾರ ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಮತ್ತು ಪೌರಾಯುಕ್ತ ಪರಶುರಾಮ ಚಲವಾದಿ ಹಾಗೂ ಸಿಬ್ಬಂದಿಯೊಡನೆ ಪರಿಶೀಲಿಸಿದರು.