ಹಾವೇರಿ:ರಾಜ್ಯದಲ್ಲಿ ಅನೇಕ ವರ್ಷಗಳಿಂದ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಇದ್ದು, ಮಾದಿಗ ಸಮಾಜದಲ್ಲಿ ಅನೇಕ ಪದವೀಧರರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಬ್ಯಾಕ್ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದುಕರ್ನಾಟಕ ರಾಜ್ಯ ಮಾದರ ಪದವೀಧರರ ಸಂಘದ ರಾಜ್ಯ ಉಪಾಧ್ಯಕ್ಷ ಸಂಜಯಗಾಂಧಿ ಸಂಜೀವಣ್ಣನವರ ಆಗ್ರಹಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಿರುದ್ಯೋಗ ಪದವೀಧರರಿಗೆ ಮಾಸಾಶನ ನೀಡಬೇಕು. ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು, ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ವರ್ಷದಲ್ಲಿ ಮೂರು ಬಾರಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಸಮಾಜದ ಅಭಿವೃದ್ಧಿಗಾಗಿ ಸಂಘಟಿತರಾಗಲು ಹಾಗೂ ಸಮಾಜದಲ್ಲಿನ ನ್ಯೂನತೆಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಾದರ ಪದವೀಧರರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ. ಸಂಘದ ಉದ್ಘಾಟನಾ ಕಾರ್ಯಕ್ರಮವು ಜ.10ರಂದು ಧಾರವಾಡದ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯಲಿದೆ ಎಂದರು.
ವಕೀಲ ಎಸ್.ಜಿ.ಹೊನ್ನಪ್ಪನವರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ,ಬಸವರಾಜ ಹೆಡಿಗೊಂಡ,ನಿವೃತ್ತ ಡಿಡಿಪಿಯು ಗಣೇಶ ಪೂಜಾರ,ಡಿಎಸ್ಎಸ್ ರಾಜ್ಯ ಸಮಿತಿ ಸಂಚಾಲಕ ಉಡಚಪ್ಪ ಮಾಳಗಿ, ಅಜ್ಜಣ್ಣ ಮಲೆಯಣ್ಣನವರ, ಹನುಮಂತಪ್ಪ ಸೊಟ್ಟಪ್ಪನವರ ಇದ್ದರು.