ಹಾವೇರಿ: ‘ಕೋವಿಡ್ ಪ್ರಮಾಣಿಕೃತ ಮಾರ್ಗಸೂಚಿಯಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಇದೇ ಜೂನ್ 25ರಿಂದ ಜುಲೈ 3ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ನಿಶ್ಚಿಂತೆಯಿಂದ ಪರೀಕ್ಷೆ ಬರೆಯಿರಿ’ ಎಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ 22,511 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ. 407 ವಿದ್ಯಾರ್ಥಿಗಳು ಹೊರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡು ವಲಸೆ ಹೋಗಿದ್ದಾರೆ. 695 ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಹಾವೇರಿಯಲ್ಲಿ ಪರೀಕ್ಷೆ ಬರೆಯಲು ಬಂದಿದ್ದಾರೆ. ಜಿಲ್ಲೆಯಲ್ಲಿ 75 ಮುಖ್ಯ ಪರೀಕ್ಷಾ ಕೇಂದ್ರಗಳು, 15 ಬ್ಲಾಕ್ ಕೇಂದ್ರಗಳನ್ನು ಗುರುತಿಸಲಾಗಿದೆ. 1420 ಕೊಠಡಿಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ. 1006 ಕೊಠಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
75 ಮುಖ್ಯ ಅಧೀಕ್ಷಕರು, 75 ಪ್ರಶ್ನೆ ಪತ್ರಿಕೆ ಪಾಲಕರು, 29 ಮಾರ್ಗಗಳಿಗೆ ಮಾರ್ಗಾಧಿಕಾರಿಗಳು ಹಾಗೂ 75 ಮೊಬೈಲ್ ಸ್ವಾಧೀನಾಧಿಕಾರಿಗಳು ಹಾಗೂ 75 ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಾರಿಗೆ ವ್ಯವಸ್ಥೆ
ನೋಂದಾಯಿತ ಯಾವುದೇ ವಿದ್ಯಾರ್ಥಿಗಳು ಸಾರಿಗೆ ಅನಾನುಕೂಲತೆಗಳಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ತೊಂದರೆಯಾಗದಂತೆ ಮುಂಜಾಗ್ರತ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸಂಪರ್ಕ ಸಾಧಿಸಿ ಸಾರಿಗೆ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲಾಗಿದೆ. 22,511 ವಿದ್ಯಾರ್ಥಿಗಳ ಪೈಕಿ 5453 ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ, 2110 ವಿದ್ಯಾರ್ಥಿಗಳು ಬೈಸಿಕಲ್ ಮೂಲಕ, 10,933 ವಿದ್ಯಾರ್ಥಿಗಳು ಕಾರು, ಬೈಕ್ ಮೂಲಕ ಸ್ವಂತ ವಾಹನದ ಮೂಲಕ ಬರಲಿದ್ದಾರೆ. 720 ಮಕ್ಕಳಿಗೆ ಖಾಸಗಿ ಶಾಲೆಯವರು ತಮ್ಮ ವಾಹನ ಮೂಲಕ ಕರೆತರಲು ಖಚಿತಪಡಿಸಿದ್ದಾರೆ. 1440 ಮಕ್ಕಳು ಶಾಲಾ ವಾಹನದ ಮೂಲಕ ಬರಲಿದ್ದಾರೆ. 1846 ಮಕ್ಕಳು ಕೆ.ಎಸ್.ಆರ್.ಟಿ.ಸಿ. ರೂಟ್ ಬಸ್ಗಳಲ್ಲಿ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ಜ್ವರ ತಪಾಸಣೆ
ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷಾ ಕೇಂದ್ರದಲ್ಲಿ ಜ್ವರ ತಪಾಸಣೆ ನಡೆಸಿ ಸ್ಯಾನಿಟೈಸರ್ ಬಳಸಿ ಕೈ ಶುದ್ಧತೆ ಮಾಡಿಕೊಂಡು ಮಾಸ್ಕ್ ಧರಿಸಿ ಕೊಠಡಿಯೊಳಗೆ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆ ಮುಗಿಯುವರೆಗೂ ಪ್ರತಿ ದಿನ ಸ್ಯಾನಿಟೈಸ್ ಮಾಡಲಾಗುವುದು. ಜ್ವರ ಲಕ್ಷಣ ಇರುವವರಿಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೇಗ ಬನ್ನಿ
ಬೆಳಿಗ್ಗೆ ಪರೀಕ್ಷೆ ಆರಂಭವಾಗುವ ಒಂದೂವರೆ ತಾಸು ಮೊದಲು ಅಂದರೆ ಬೆಳಿಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾದರೆ, 9 ಗಂಟೆಯೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ತಪಾಸಣೆಗೊಳಗಾಗಬೇಕು. ತಪಾಸಣೆ ಬಳಿಕವೇ ಕೊಠಡಿಯೊಳಗೆ ಪ್ರವೇಶ ಮಾಡಬೇಕು. ಬರುವಾಗ ಮತ್ತು ಹೋಗುವಾಗ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕುಸಾರ್ವಜನಿಕರ ಸಂಪರ್ಕಕ್ಕೆ ಸಹಾಯವಾಣಿ: 9480574530 ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.