ಹಾವೇರಿ: ‘ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ಮನವೊಲಿಸುವ ಪ್ರಕ್ರಿಯೆ ನಡೆದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
‘ದಿಂಗಾಲೇಶ್ವರ ಸ್ವಾಮೀಜಿ ಜೊತೆ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ. ನಾನೂ ಮಾತನಾಡುವೆ. ಮಾತುಕತೆಗೆ ಇನ್ನೂ ಸಮಯವಿದೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
‘ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆಯೆಂದು ಭವಿಷ್ಯ ನುಡಿಯಲ್ಲ. ಆದರೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುವುದನ್ನು ನೋಡುತ್ತ ಡಿ.ಕೆ.ಶಿವಕುಮಾರ್ ಕೂತಿರಲ್ಲ’ ಎಂದರು.
‘ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಿಂದ ಕಸಿದುಕೊಳ್ಳುತ್ತಿದೆ. ಮೋದಿ ಗ್ಯಾರಂಟಿ ಬಗ್ಗೆ ಜನರಿಗೆ ವಿಶ್ವಾಸವಿದೆಯೇ ಹೊರತು ರಾಜ್ಯ ಸರ್ಕಾರದ ತಾತ್ಕಾಲಿಕ ಗ್ಯಾರಂಟಿ ಬಗ್ಗೆ ಅಲ್ಲ’ ಎಂದರು.