ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ರಹಿತರಿಗೆ ಶಾಶ್ವತ ಸೂರು: ಮಾನೆ

ಜಿ+2 ಮನೆಗಳ ನಿರ್ಮಾಣದ ಗುರಿ
Published 30 ಜನವರಿ 2024, 4:27 IST
Last Updated 30 ಜನವರಿ 2024, 4:27 IST
ಅಕ್ಷರ ಗಾತ್ರ

ಹಾನಗಲ್: ಪುರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಮನೆ ಮಾಲೀಕತ್ವದ ಹಕ್ಕುಪತ್ರ ವಿತರಿಸುವ ಗುರಿ ಹೊಂದಲಾಗಿದ್ದು, ಜಿ+2 ಮನೆಗಳನ್ನು ನಿರ್ಮಿಸಿ ವಸತಿ ರಹಿತರ ಶಾಶ್ವತ ಸೂರಿನ ಕನಸು ನನಸಾಗಿಸುವ ಉದ್ದೇಶವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಇಲ್ಲಿನ ತುರಬಂದಿ ಓಣಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪಟ್ಟಣದ ವಿವಿಧ ಕೊಳಚೆ ಪ್ರದೇಶದ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೂ ಮನೆ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ 64 ಹಕ್ಕುಪತ್ರ ವಿತರಿಸಲಾಗಿದೆ. ಇದೀಗ ಎರಡನೆ ಹಂತದಲ್ಲಿ 84 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು.

ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಹೋರಾಟದಲ್ಲಿ ಹಲವು ವರ್ಷಗಳ ಮೊದಲೇ ನಿರತನಾಗಿದ್ದೇನೆ. ಕೊಳಚೆ ಪ್ರದೇಶ ಎಂದು ಘೋಷಿಸಿದರೆ, ಅಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಮೊದಲಿಗೆ ಕೊಳಚೆ ಪ್ರದೇಶ ಎಂದು ಘೋಷಿಸಿ, ನಂತರ ಅಲ್ಲಿನ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಗಮನ ನೀಡಲಾಗಿದೆ ಎಂದರು.

ಪುರಸಭೆ ಮಾಜಿ ಉಪಾಧ್ಯಕ್ಷೆ ಶಂಶಿಯಾ ಬಾಳೂರ ಮಾತನಾಡಿ, ಶಾಸಕ ಶ್ರೀನಿವಾಸ ಮಾನೆ ಅವರ ನಿರಂತರ ಪ್ರಯತ್ನದ ಫಲದಿಂದ ಇದೀಗ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಮನೆ ಮಾಲೀಕತ್ವದ ಹಕ್ಕುಪತ್ರ ವಿತರಿಸುವಂತಾಗಿದೆ. ಇನ್ನೂ ಸಾಕಷ್ಟು ಕುಟುಂಬಗಳು ಅರ್ಜಿ ಸಲ್ಲಿಸಲು ಮುಂದೆ ಬರುತ್ತಿಲ್ಲ. ಮೊದಲಿಗೆ ಮನೆಯ ಮಾಲಿಕತ್ವ ಪಡೆದರೆ ನಂತರ ಸೌಲಭ್ಯಗಳೂ ಸಿಗಲಿವೆ ಎಂದರು.

ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ದೇವರಾಜ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 15 ಕೊಳಚೆ ಪ್ರದೇಶಗಳಿವೆ. ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಮನೆಗಳ ಮಾಲಿಕತ್ವ ಹೊಂದದೇ ಇರುವ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್ಅಹ್ಮದ್ ಹುಲ್ಲತ್ತಿ, ನಾಗಪ್ಪ ಸವದತ್ತಿ, ಸದಸ್ಯರಾದ ಪರಶುರಾಮ ಖಂಡೂನವರ, ವಿರುಪಾಕ್ಷಪ್ಪ ಕಡಬಗೇರಿ, ಮುನ್ನಾ ನಾಯ್ಕರ, ಸುರೇಶ ನಾಗಣ್ಣನವರ, ಮೇಕಾಜಿ ಕಲಾಲ, ಗಾಯಿತ್ರಿ ಕೊಲ್ಲಾಪೂರ, ಆಶ್ರಯ ಸಮಿತಿ ಸದಸ್ಯರಾದ ವಿನಯ ಬಂಕನಾಳ, ಮಾಲತೇಶ ಕಾಳೇರ, ನಿಯಾಜ್ಅಹ್ಮದ್ ಸರ್ವಿಕೇರಿ, ಮುಖ್ಯಾಧಿಕಾರಿ ಜಗದೀಶ ವೈ.ಕೆ., ಯೋಜನಾಧಿಕಾರಿ ಶಿವಾನಂದ ಕ್ಯಾಲಕೊಂಡ, ಸಿಬ್ಬಂದಿ ಗುರುರಾಜ ಪೂಜಾರ, ಎ.ಎ.ಉಪ್ಪಿನ, ಶಿವರುದ್ರಪ್ಪ ಚನ್ನಗೌಡ್ರ, ಮಧುಮತಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT