ಹಾವೇರಿ:‘ಪೊಲೀಸರು ಆಯ್ದ ಸಿಸಿಟಿವಿ ದೃಶ್ಯಗಳನ್ನು ಸೋರಿಕೆ ಮಾಡಿದ್ದಾರೆ ಮತ್ತು ಶಾಂತಿ ಕದಡಿದ್ದಾರೆ’ ಎಂದು ಹೇಳುವ ಮೂಲಕ ಶಾಸಕ ಸಿದ್ದರಾಮಯ್ಯ ಅವರು ಪೊಲೀಸರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ ಎಂದು ಬೆಂಗಳೂರು ದಕ್ಷಿಣಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆ ನೀಡುವ ಮೂಲಕಪೊಲೀಸರ ಆತ್ಮಸ್ಥೈರ್ಯ ಮತ್ತು ಜಂಘಾಬಲವನ್ನೇ ಕುಸಿಯುವಂತೆ ಮಾಡಿದ್ದಾರೆ.ಇಂತಹ ಹೇಳಿಕೆ ಕೊಡಬೇಡಿ. ರಾಜಕೀಯ ವಿಚಾರಗಳಿಗೆ ಪೊಲೀಸರ ಬಳಕೆ ಬೇಡ’ ಎಂದು ಮನವಿ ಮಾಡಿದರು.
ಮಂಗಳೂರು ಗಲಭೆಗೆ ಸಂಬಂಧಿಸಿದ ವಿಡಿಯೊಗಳನ್ನು ಪೊಲೀಸರು ಬಿಡುಗಡೆ ಮಾಡಿಲ್ಲ. ತಮಗೆ ಸಿಕ್ಕ ವಿಡಿಯೊಗಳನ್ನು ಮಾಧ್ಯಮದವರು ಬಿಡುಗಡೆ ಮಾಡಿದ್ದಾರೆ. ಈ ವಿಚಾರವನ್ನು ಸರಿಯಾಗಿ ತಿಳಿದುಕೊಂಡು ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದರು.