ಹಾವೇರಿ: ರಾಣೆಬೆನ್ನೂರು ತಾಲ್ಲೂಕು ಚಿಕ್ಕಕುರುವತ್ತಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕ ಮತ್ತು ತಹಶೀಲ್ದಾರ್ ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳು ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ‘ತಮಟೆ ಚಳವಳಿ’ ನಡೆಸಿದರು.
2019–20ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಅಂಬೇಡ್ಕರ್ ಭವನ ಮಂಜೂರಾಗಿದೆ. ಆದರೆ, ಭವನದ ಶಂಕುಸ್ಥಾಪನೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಾರ್ವಜನಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸದ ಕಾರಣ, ನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದೆ. ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ, ಮಟಕಾ ಮತ್ತು ಜೂಜು ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈಗ ಸಾಂಕೇತಿಕವಾಗಿ ತಮಟೆ ಚಳವಳಿ ನಡೆಸಿದ್ದೇವೆ.ಚಿಕ್ಕಕುರುವತ್ತಿ ಗ್ರಾಮದಲ್ಲಿ ಆಗಿರುವ ಸಮಸ್ಯೆಯನ್ನು ಸರಿಪಡಿಸದೇ ಹೋದಲ್ಲಿ, ಶಾಸಕರ ಮತ್ತು ತಹಶೀಲ್ದಾರ್ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.