ಹಾವೇರಿ:ಇಜಾರಿಲಕಮಾಪುರದಲ್ಲಿ ಸೋಮವಾರ ಸಂಜೆ ಸ್ಫೋಟಗೊಂಡ ಮನೆಯಲ್ಲಿ ಕಲ್ಲು ಕ್ವಾರಿಯಲ್ಲಿ ಬಳಸುವ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಪರವಾನಗಿ ಇರಲಿಲ್ಲ ಎಂಬುದು ತಿಳಿದು ಬಂದಿದೆ.
ಸ್ಫೋಟಗೊಂಡ ರಭಸಕ್ಕೆರಾಮಣ್ಣ ಗಚ್ಚಿನಮನಿ ಎಂಬುವರ ಮನೆಯ ಬೆಡ್ರೂಂ ಗೋಡೆ ಉರುಳಿಬಿದ್ದಿದ್ದು, ಇತರ ಗೋಡೆಗಳು ಬಿರುಕು ಬಿಟ್ಟಿವೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಗ್ಯಾಸ್ ಸಿಲಿಂಡರ್ ಅಥವಾ ಸ್ಫೋಟಕ ವಸ್ತು ಈ ಎರಡರಲ್ಲಿ ಯಾವುದರಿಂದ ಸ್ಫೋಟ ಸಂಭವಿಸಿದೆ ಎಂಬುದು ನಿರ್ದಿಷ್ಟವಾಗಿ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದ್ದು, ತಜ್ಞರು ಈ ಬಗ್ಗೆ ಶೀಘ್ರದಲ್ಲೇ ವರದಿ ನೀಡಲಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸೋಮವಾರ ರಾತ್ರಿ ಎಸ್ಪಿ ಕೆ.ಜಿ.ದೇವರಾಜು, ಎಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದರು.ಹುಬ್ಬಳ್ಳಿಯ ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ, ಶ್ವಾನದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.