ಹಾವೇರಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಹಾವೇರಿ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಎದುರಿಸುತ್ತಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ನೂತನ ಪರೀಕ್ಷಾ ವಿಧಾನ ಕುರಿತು ಒಂದು ದಿನದ ಉಚಿತ ಕಾರ್ಯಾಗಾರ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಹಾಲಸ್ವಾಮಿ ಮಠದಲ್ಲಿ ಶನಿವಾರ ನಡೆಯಿತು.
ಕಾರ್ಯಾಗಾರದಲ್ಲಿ ಗ್ರಾಮದ 23 ವಿದ್ಯಾರ್ಥಿಗಳು ಪಾಲ್ಗೊಂಡು, ಹೊಸ ಪರೀಕ್ಷಾ ವಿಧಾನದ ಬಗೆಗಿನ ಗೊಂದಲಗಳನ್ನು ಗಣಿತ ಶಿಕ್ಷಕ ಮಲ್ಲಿಕಾರ್ಜುನ ಕೋಡಬಾಳ ಹಾಗೂ ವಿಜ್ಞಾನ ಶಿಕ್ಷಕಿ ನರ್ಗೀಸ್ ಪಿಂಜಾರ ಅವರೊಂದಿಗೆ ಚರ್ಚಿಸಿ ಪರಿಹರಿಸಿಕೊಂಡರು. ಈ ವೇಳೆ ಬದಲಾದ ಪರೀಕ್ಷಾ ನೂತನ ಮಾರ್ಗಸೂಚಿಯನ್ವಯ ವಿದ್ಯಾರ್ಥಿಗಳು ಪ್ರಶ್ನೋತ್ತರಗಳಿಗೆ ಸರಿಯಾದ ಉತ್ತರವನ್ನು ಆಯ್ಕೆ ಮಾಡುವ ವಿಧಾನವನ್ನು ತಿಳಿಸಿಕೊಟ್ಟರು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ನಲ್ಲಿ ಬಿಡುಗಡೆಗೊಳಿಸಿರುವ ಮಾದರಿ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಪ್ರತಿಗಳ ನಕಲನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಬಹು ಆಯ್ಕೆಯುಳ್ಳ ಪ್ರಶ್ನೆಪತ್ರಿಕೆಯಲ್ಲಿ ಸರಿಯಾದ ಉತ್ತರವನ್ನು ಆಯ್ಕೆ ಮಾಡಿ ಉತ್ತರ ಪ್ರತಿಯಲ್ಲಿ ಗುರುತು (ಶೇಡ್) ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು.
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಉಪನ್ಯಾಸಕರಿಗೆ ಶ್ರೀಮಠದ ಹಾಗೂ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶ್ರೀಮಠದ ವತಿಯಿಂದ ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಸಣ್ಣಹಾಲಸ್ವಾಮಿಗಳು ವಿದ್ಯಾರ್ಥಿಗಳಿಗೆ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.