ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ದೇವರಾಜ ಅರಸು ಭವನದ ಮುಂದೆ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2 ತಿಂಗಳು ಕಳೆದರೂ ತಾಲ್ಲೂಕಿನಲ್ಲಿ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ.ಹೀಗಾಗಿ ಅರ್ಜಿ ಹಾಕಿರುವ ಗ್ರಾಮೀಣ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ನಿತ್ಯ ಹಣ ಕೊಟ್ಟು ಬಸ್ಗಳಲ್ಲಿ ಬರುವಂತಾಗಿದೆ. ಕೆಲವು ಗ್ರಾಮಗಳಿಗೆ ಬಸ್ ಸೌಲಭ್ಯ ಸಮರ್ಪಕವಾಗಿ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ಶಾಸಕರ ಕಡೆಯಿಂದ ಸಹಿ ತೆಗೆದುಕೊಂಡು ಬಂದು ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದರು. 2ನೇ ಹಂತದ ಪಟ್ಟಿ ಬಿಡುಗಡೆ ಒಂದು ವಾರದ ಬಳಿಕ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.