ಬೆಂಗಳೂರು: ರೈತರ ಉತ್ಪಾದನೆಯ ಸರಾಸರಿ ವೆಚ್ಚಕ್ಕಿಂತ ಕನಿಷ್ಠ ಬೆಂಬಲ ಬೆಲೆಯನ್ನು ಶೇ 50ರಷ್ಟು ಹೆಚ್ಚು ನಿಗದಿ ಮಾಡಬೇಕು ಹಾಗೂ ರೈತರನ್ನು ಸಾಲಮುಕ್ತರನ್ನಾಗಿಸಬೇಕು ಎಂದು ಒತ್ತಾಯಿಸಿ ಇದೇ 23ರಂದು ದೆಹಲಿ ಘೇರಾವ್ ನಡೆಸಲಾಗುವುದು ಎಂದು ರಾಷ್ಟ್ರೀಯ ಕಿಸಾನ್ ಮಹಾ ಸಂಘ ತಿಳಿಸಿದೆ.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಸಂಚಾಲಕ ಗುರುನಾಮ್ ಸಿಂಗ್, ‘ದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುವುದು’ ಎಂದರು.
‘7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡಲಾಗಿದೆ. ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಲೋಕಸಭಾ ಸದಸ್ಯರ ಸಂಬಳ ಹೆಚ್ಚಿಸಲಾಗಿದೆ. ಆದರೆ, ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಬಳಿ ಹಣವಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.