ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ತಾಪುರ: ಧಾರಾಕಾರ ಮಳೆ; 12 ಸಾವಿರ ಹೆಕ್ಟೇರ್ ಬೆಳೆ ಹಾನಿ

Last Updated 14 ಸೆಪ್ಟೆಂಬರ್ 2020, 8:04 IST
ಅಕ್ಷರ ಗಾತ್ರ

ಚಿತ್ತಾಪುರ: ತಾಲ್ಲೂಕಿನೆಲ್ಲೆಡೆ ಶನಿವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೆ ಪ್ರವಾಹದ ನೀರು ನುಗ್ಗಿ ಸುಮಾರು 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಕಳೆದ ಜೂನ್‌ನಿಂದ ಆಗಸ್ಟ್‌ವರೆಗೆ ಸುರಿದ ಅತಿವೃಷ್ಟಿಯಿಂದ ಹೆಸರು, ಉದ್ದು, ತೊಗರಿ ಬೆಳೆಗಳಿಗೆ ಹಾನಿಯಾಗಿದೆ. ಜಮೀನುಗಳಲ್ಲಿ ಮಳೆ ನೀರು ನಿಂತು, ತಗ್ಗು ಪ್ರದೇಶದಲ್ಲಿ ನೀರು ಹರಿದು ನದಿ, ಹಳ್ಳಗಳ ಪಕ್ಕದಲ್ಲಿ ಇರುವ ಜಮೀನುಗಳಿಗೆ ಪ್ರವಾಹದ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.

ತಾಲ್ಲೂಕಿನ ಗುಂಡಗುರ್ತಿ ಹೋಬಳಿ ವ್ಯಾಪ್ತಿಯಲ್ಲಿ ಅತಿವೃಷ್ಟಿಯಾಗಿದ್ದು, ಹಳ್ಳದ ನೀರು ತೊಗರಿ ಹೊಲಗಳಿಗೆ ನುಗ್ಗಿ ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬಾಳೆ ತೋಟಕ್ಕೆ ನೀರು ನುಗ್ಗಿ ರೈತರು ಆತಂಕ ಪಡುವಂತಾಗಿದೆ ಎಂದು ಗ್ರಾಮದ ರೈತ ಸುನಿಲ್ ದೊಡ್ಡಮನಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಕಲಬುರ್ಗಿ ತಾಲ್ಲೂಕಿನ ಖಾಜಾ ಕೊಟನೂರ ಗ್ರಾಮದ ಕೆರೆ ಭರ್ತಿಯಾಗಿ ನೀರು ಹೊರಗೆ ಬಿಟ್ಟಿದ್ದರಿಂದ ಗುಂಡಗುರ್ತಿ ಹಳ್ಳದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನೀರು ಜಮೀನುಗಳಿಗೆ ನುಗ್ಗಿ ತೊಗರಿ ಬೆಳೆ ಬೇರು ಕೊಳೆತು ಒಣಗುತ್ತದೆ. ರೈತರಿಗೆ ಆರ್ಥಿಕ ನಷ್ಟ ಖಚಿತ ಎಂದು ಹೇಳಿದರು.

ಮಳೆಯಿಂದ ಮತ್ತು ಪ್ರವಾಹದ ನೀರಿನಿಂದ ಬೆಳೆ ಹಾನಿ ಉಂಟಾದರೂ ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬೆಳೆ ಹಾನಿಯ ಸಮೀಕ್ಷೆಯನ್ನೂ ಕೈಗೊಂಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳೆ ಹಾನಿಯ ಕುರಿತು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಬೆಳೆ ಸಮೀಕ್ಷೆ ಪ್ರಗತಿಯಲ್ಲಿದ್ದು, ಅದು ಮುಗಿದ ನಂತರ ಬೆಳೆ ಹಾನಿಯ ನಿಖರ ಮಾಹಿತಿ ಸಿಗಲಿದೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹ ಶೀಲ್ದಾರ್ ಉಮಾಕಾಂತ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT