ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮುವಾದದ ವಿರುದ್ಧ ಆಂದೋಲನ ಅಗತ್ಯ

ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ ಅಭಿಮತ
Last Updated 11 ಜನವರಿ 2021, 2:49 IST
ಅಕ್ಷರ ಗಾತ್ರ

ಕಲಬುರ್ಗಿ: ‘ಕೋಮುವಾದಿ ಶಕ್ತಿಗಳು ಧಾರ್ಮಿಕ ದ್ವೇಷದ ಮೂಲಕ ದೇಶದ ದುಡಿಯುವ ಜನರ ಒಗ್ಗಟ್ಟನ್ನು ಮುರಿಯಲು ಯತ್ನಿಸುತ್ತಿವೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ರಾಜ್ಯ ಮತ್ತು ದೇಶವ್ಯಾಪಿ ಜನಾಂದೋಲನ ರೂಪಿಸಬೇಕಿದೆ’ ಎಂದು ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎ. ವಿಜಯಭಾಸ್ಕರ ತಿಳಿಸಿದರು.‌

ನಗರದ ವಿಶ್ವೇಶ್ವರಯ್ಯ ಎಂಜಿನಿಯರ್ ಭವನದಲ್ಲಿ ಭಾನುವಾರ ನಡೆದ ಎಐಟಿಯುಸಿ 7ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

‘ನಿರಂತರ ಹೋರಾಟ ಮತ್ತು ಬಲವಾದ ಒಗ್ಗಟ್ಟಿನಿಂದ ಕೋಮುವಾದ ಮತ್ತು ಫ್ಯಾಸಿಸಂ ವಿರುದ್ಧ ಹೋರಾಟ ಮಾಡುವುದು ಇಂದಿನ ಅಗತ್ಯವಾಗಿದೆ. ಕೋಮುವಾದಿಗಳು ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದು ನೈಜ ಸಮಸ್ಯೆಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಕೋಮುವಾದಿ ಶಕ್ತಿಗಳಿಗೆ ತಕ್ಕ ಉತ್ತರ ನೀಡಲು ಜಾತಿ, ಧರ್ಮ, ಸಿದ್ಧಾಂತ ಎಲ್ಲವನ್ನೂ ಮೀರಿ ಒಂದಾಗಬೇಕಿದೆ. ಭಿನ್ನಾಭಿಪ್ರಾಯಗಳನ್ನು ಮರೆತು ದೇಶ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ಮುನ್ನಡೆಯಬೇಕಿದೆ’ ಎಂದರು.

ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಮಾತನಾಡಿ, ‘ಕಾರ್ಮಿಕರು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಸಿದ್ಧಾಂತದಡಿ ಸಂಘಟಿತರಾಗಿ ರಾಜಕೀಯ ಅಧಿಕಾರ ಪಡೆದುಕೊಂಡಾಗ ಮಾತ್ರ ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ಸಾಧ್ಯ. ದುಡಿಯುವ ವರ್ಗ ಎಚ್ಚೆತ್ತುಕೊಂಡು ನಾವೆಲ್ಲ ಒಂದು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.

‘ಕೇಂದ್ರ ಸರ್ಕಾರ ತನ್ನ ಸ್ವಾಯತ್ತ ಸಂಸ್ಥೆಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದೆ. ಖಾಸಗೀಕರಣ ಹೆಚ್ಚಾದಂತೆ ಕಾರ್ಮಿಕ ಹಕ್ಕುಗಳು ಉಳಿಯುದಿಲ್ಲ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ. ಕನಿಷ್ಠ ಸೌಲಭ್ಯಗಳು ಕೂಡ ಇರುವುದಿಲ್ಲ. ಇದರ ವಿರುದ್ಧ ನಾವು ಸಂಘಟಿತರಾಗಿ ಹೋರಾಟಬೇಕು’ ಎಂದರು.

ಎಐಟಿಯುಸಿ ಮುಖಂಡ ಬಾಬು ರಾವ ಹೊನ್ನಾ, ಸಿಪಿಐ ಕಾರ್ಯದರ್ಶಿ ಮಹೇಶಕುಮಾರ ರಾಠೋಡ, ಎಐಟಿಯುಸಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಎಂ.ಪತ್ತಾರ, ಎಲ್‌ಐಸಿ ಯೂನಿಯನ್ ಮುಖಂಡ ಸಿ.ಕೆ.ವಿಜೇಂದ್ರ, ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿ ಅಧ್ಯಕ್ಷ ಹಣಮಂತರಾಯ ಅಟ್ಟೂರ ಮಾತನಾಡಿದರು. ಎಐಟಿಯುಸಿ ಜಿಲ್ಲಾ ಸಮಿತಿ ಪ್ರಭುದೇವ ಯಳಸಂಗಿ
ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT