ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯ್ಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸಂವಿಧಾನ ಕರಡು ರಚನಾ ಸಮಿತಿಯಲ್ಲಿ ಹಲವು ಸದಸ್ಯರಿದ್ದರೂ ಅಂಬೇಡ್ಕರ್ ಅವರಿಗೆ ಹೆಚ್ಚಿನ ಜವಾಬ್ದಾರಿ ಇತ್ತು. ಹೀಗಾಗಿಯೇ ಇತಿಹಾಸದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಅವರು ರಚಿಸಿದ ಸಂವಿಧಾನವನ್ನು ಅಳವಡಿಸಿಕೊಂಡು ನಾವೆಲ್ಲ ಭಾರತೀಯರು ಎಂಬ ಸಮಾನತೆಯ ಪ್ರಜ್ಞೆ ಬೆಳೆಯಬೇಕು’ ಎಂದರು.
ಕುಲಪತಿ ಪ್ರೊ. ದಯಾನಂದ ಅಗಸರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ಸಿಂಡಿಕೇಟ್ ಸದಸ್ಯ ಡಾ. ಸಂಪತ್ ಕುಮಾರ್ ಲೋಯಾ, ಅಕಾಡೆಮಿಕ್ ಕೌನ್ಸಲ್ ಸದಸ್ಯ ಡಾ. ನಿಂಗಣ್ಣ ಕಣ್ಣೂರ, ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ. ಚಂದ್ರಕಾಂತ ಯಾತನೂರ ವೇದಿಕೆಯಲ್ಲಿದ್ದರು.