ಕಲಬುರಗಿ: ‘ವಿಜಯಪುರದ ಸಂಸದ, ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಬಂಜಾರ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು’ ಎಂದು ಗೋರ ಸೇನಾ ರಾಜ್ಯ ಸಮಿತಿ ಜಿಲ್ಲಾ ಅಧ್ಯಕ್ಷ ಮಾನಸಿಂಗ್ ಆರ್. ಚವ್ಹಾಣ್ ಒತ್ತಾಯಿಸಿದರು.
‘ಬಂಜಾರ ಸಮಾಜದ ಮುಖಂಡ ಬಾಬು ರಾಜೇಂದ್ರ ನಾಯಕ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸುವಾಗ ಜಿಗಜಿಣಗಿ ಅವರು ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ್ ಮಾತನಾಡಿ, ‘ಜಿಗಜಿಣಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಬಂಜಾರ ಸಮಾಜದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘನೆಯ ಪದಾಧಿಕಾರಿಗಳಾದ ಯಮರಾಜ, ಪ್ರಭಾಕರ ರಾಠೋಡ, ಗುಂಡು ಚವ್ಹಾಣ ಉಪಸ್ಥಿತರಿದ್ದರು.