ಕಲಬುರ್ಗಿ: ರಾಜ್ಯದಾದ್ಯಂತ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಹೆಚ್ಚಾಗಿ ತೊಗರಿ ಬೆಳೆಯುವಕಲಬುರ್ಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.
ತೊಗರಿ ಸಂಗ್ರಹಾಗಾರದಿಂದ 50 ಕಿ.ಮೀ. ವ್ಯಾಪ್ತಿಯ ಒಳಗಡೆಯೇ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಅದಕ್ಕಿಂತ ಹೆಚ್ಚಿನ ದೂರ ಇದ್ದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರ ವಿವೇಚನೆ ಮೇರೆಗೆ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.
1,82,875 ಮೆಟ್ರಿಕ್ ಟನ್ ತೊಗರಿಯನ್ನು ಖರೀದಿಸಲು ಅನುಮತಿ ನೀಡಲಾಗಿದ್ದು, 90 ದಿನಗಳವರೆಗೆ ಬೆಂಬಲ ಬೆಲೆಯಡಿ ಖರೀದಿ ಪ್ರಕ್ರಿಯೆ ನಡೆಸಬೇಕು ಎಂದು ಸಚಿವಾಲಯದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವಿಭಾಗದ ನಿರ್ದೇಶಕ ಶಶಿಭೂಷಣ್ ತಿಳಿಸಿದ್ದಾರೆ.
‘ರಾಜ್ಯದಲ್ಲೇ ಅತಿ ಹೆಚ್ಚು ತೊಗರಿ ಬೆಳೆಯುವ ಕಲಬುರ್ಗಿ ಜಿಲ್ಲೆಯಲ್ಲೇ 56 ಲಕ್ಷ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಕ್ವಿಂಟಲ್ಕಾಳು ಸಂಗ್ರಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖರೀದಿ ಕೇಂದ್ರಗಳನ್ನೂ ಗುರುತಿಸಲಾಗಿದೆ.ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೀಂದ್ರನಾಥ ಸೂಗೂರ ಪ್ರತಿಕ್ರಿಯಿಸಿದರು.