ಅಫಜಲಪುರ: ಪಟ್ಟಣದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆ ಕಟ್ಟೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಬೇಕು ಎಂದು ತಾಲ್ಲೂಕು ಜೆಡಿಎಸ್ ಮುಖಂಡರು ಈಚೆಗೆ ಇಲ್ಲಿನ ಪುರಸಭೆ ಕಾರ್ಯಾಲಯದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದರು.
ನೇತೃತ್ವ ವಹಿಸಿದ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಬಡದಾಳ ಮಾತನಾಡಿ, ‘ಅನೇಕ ವರ್ಷಗಳಿಂದ ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದರು.
ಪುರಸಭೆಯ ಆಡಳಿತಾಧಿಕಾರಿಯೂ ಆಗಿರುವ ವಿಭಾಗಾಧಿಕಾರಿ ರಾಮಚಂದ್ರ ಗಡದೆ ಅವರು ಪ್ರತಿಭಟನಕಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಶೀಘ್ರ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದಾಗ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದರು.
‘ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ಈ ಕುರಿತು ಅಫಜಲಪುರ ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶೀಘ್ರದಲ್ಲೇ ಅಧಿಕಾರಿಗಳ ಮತ್ತು ಸಾರ್ವಜನಿಕ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಗಡದೆ ತಿಳಿಸಿದರು.