ಚಿಂಚೋಳಿ: ಅತಿವೃಷ್ಟಿಯಿಂದ 12,340 ಹೆಕ್ಟೇರ್ ಬೆಳೆ ಹಾನಿ

ಚಿಂಚೋಳಿ: ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 12,340 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಕುರಿತು ಜಂಟಿ ಸಮೀಕ್ಷಾ ವರದಿ ಸಲ್ಲಿಸಲಾಗಿದೆ ಎಂದು ಕಾರ್ಯ ನಿರ್ವಾಹಕ ಅನಿಲ ರಾಠೋಡ್ ತಿಳಿಸಿದರು.
ತಾ.ಪಂ. ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆಯ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರೂ ಆಗಿರುವ ಅನಿಲ ರಾಠೋಡ್ ಅವರು ಅತಿವೃಷ್ಟಿಯಿಂದ 11,605 ಹೆಕ್ಟೇರ್, ನಾಗರಾಳ ಜಲಾಶಯದಿಂದ ನೀರು ಬಿಟ್ಟಿದ್ದರಿಂದ 765 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಅತಿವೃಷ್ಟಿ ಹಾನಿಯ ಸಮೀಕ್ಷೆ ಮುಂದುವರಿದಿದೆ ಎಂದರು.
ಲಂಪಿಸ್ಕಿನ್ ಕಾಯಿಲೆಯಿಂದ ತಾಲ್ಲೂಕಿನಲ್ಲಿ 4 ಸಾವಿರ ರಾಸುಗಳು ಬಳಲುತ್ತಿವೆ. ಅಗತ್ಯ ಔಷಧ ಕೊರತೆ ಇರುವ ಬಗ್ಗೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಧನರಾಜ ಬೊಮ್ಮಾ ಸಭೆಯ ಗಮನಕ್ಕೆ ತಂದಾಗ ಇಲಾಖೆಯ ಯೋಜನೆಯಲ್ಲಿ ಔಷಧಿ ಖರೀದಿಸಲು ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ ಸೂಚಿಸಿದರು.
ತೋಟಗಾರಿಕಾ ಇಲಾಖೆ, ಶಿಕ್ಷಣ ಇಲಾಖೆ, ಸಣ್ಣ ನೀರಾವರಿ, ಬೃಹತ್ ನೀರಾವರಿ ಯೋಜನೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗ, ಅರಣ್ಯ, ಸಾಮಾಜಿಕ ಅರಣ್ಯ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಮೀನುಗಾರಿಕೆ, ಕೃಷಿ, ಲೋಕೋಪಯೋಗಿ ಇಲಾಖೆಗಳ ಪ್ರಗತಿ ಪರಿಶೀಲಿಸಿದರು.
ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿರಂಜೀವಿ ಪಾಪಯ್ಯ
ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.