ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಹೆಚ್ಚಳ ಖಂಡಿಸಿ ಸೈಕಲ್, ಟಾಂಗಾ ಸವಾರಿ

ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ
Last Updated 30 ಜೂನ್ 2020, 9:07 IST
ಅಕ್ಷರ ಗಾತ್ರ

ಕಲಬುರ್ಗಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿತ್ಯವೂ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೈಕಲ್ ಸವಾರಿ ಮಾಡುವ ಮೂಲಕ ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್, ಶಾಸಕಿ ಖನೀಜ್ ಫಾತಿಮಾ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಪಕ್ಷದ ಕಚೇರಿಯಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಕ್ತಾಯವಾಯಿತು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ತೈಲ ಬೆಲೆ ಹೆಚ್ಚಳವನ್ನು ಹಿಂದಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಜಯ್ ಸಿಂಗ್ ಹಾಗೂ ಡಾ.ಶರಣಪ್ರಕಾಶ ಪಾಟೀಲ, ಪೆಟ್ರೋಲ್ ಮೇಲೆ ಶೇ 200ರಷ್ಟು ಮತ್ತು ಡಿಸೆಲ್ ಮೇಲೆ ಶೇ 800ರಷ್ಟು ಅಬಕಾರಿ ಸುಂಕವನ್ನು ಕಳೆದೊಂದು ತಿಂಗಳಲ್ಲಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಜನರ ಜೇಬಿಗೆ ಕತ್ತರಿ ಬಿದ್ದಿದೆ ಎಂದು ಟೀಕಿಸಿದರು.

ಲಾಕ್‍ಡೌನ್ ನೆರವಿಗೆ ಕೇಂದ್ರ ಸರ್ಕಾರ ಆತ್ಮ ನಿರ್ಭರ ಯೋಜನೆಯಡಿ ₹ 20 ಲಕ್ಷ ಕೋಟಿ ಪ್ಯಾಕೇಜ್ ಪ್ರಕಟಿಸಿದೆ. ಆದರೆ, ಅದಕ್ಕೆ ಬೇಕಾಗಿರುವ ₹ 18 ಲಕ್ಷ ಕೋಟಿಯನ್ನು ಕೇವಲ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಈಗಾಗಲೇ ಜನರಿಂದ ವಸೂಲಿ ಮಾಡಿಯಾಗಿದೆ. ಆದರೆ, ಅದರ ಲಾಭ ಮಾತ್ರ ಯಾರೊಬ್ಬರಿಗೂ ಸಿಗುತ್ತಿಲ್ಲ. ಬದಲಿಗೆ ಜನರನ್ನು ಮೋಸದ ಮಾಯಾ ಜಾಲದಲ್ಲಿ ಸಿಲುಕಿಸಲಾಗಿದೆ ಎಂದರು.

2014ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‍ಗೆ 108 ಡಾಲರ್ ಇತ್ತು. ಈಗ ಬ್ಯಾರೆಲ್‍ಗೆ 43.15 ಡಾಲರ್‌ಗೆ ಇಳಿದಿದೆ. ಹೀಗಿರುವಾಗ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಪ್ರತಿ ಲೀಟರ್‌ಗೆ ₹ 25ರಿಂದ ₹ 30 ಕ್ಕೆ ಮಾರಾಟ ಮಾಡಬೇಕಾಗಿತ್ತು. ಆದರೆ, ಅದರ ಲಾಭವನ್ನು ಜನರಿಗೆ ತಲುಪಿಸುವ ಬದಲು ಹಗಲು ದರೋಡೆಗೆ ಇಳಿದಿದೆ ಎಂದು ಹರಿಹಾಯ್ದರು.

ಮಾಜಿ ಸಚಿವ ಕೆ.ಬಿ.ಶಾಣಪ್ಪ, ಶಾಸಕಿ ಖನೀಜ್ ಫಾತಿಮಾ, ಮಾಜಿ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ದಕ್ಷಿಣ ಬ್ಲಾಕ್ ಅಧ್ಯಕ್ಷ ನೀಲಕಂಠ ಮೂಲಗೆ, ಉತ್ತರ ಅಧ್ಯಕ್ಷ ಸೈಯದ್ ಅಹ್ಮದ್, ಮಹಿಳಾ ಅಧ್ಯಕ್ಷೆ ಲತಾ ರವಿ ರಾಠೋಡ, ಮಾಜಿ ಮೇಯರ್ ಶರಣಕುಮಾರ ಮೋದಿ, ಪ್ರಮುಖರಾದ ನಾರಾಯಣರಾವ ಕಾಳೆ, ಸುಭಾಷ ರಾಠೋಡ, ಬಸವರಾಜ ಬಿರಾದಾರ ಸೊನ್ನ, ಸಂಜೀವ್ ಐರಡ್ಡಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT