ಚಿತ್ತಾಪುರ: 15 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತದಿಂದ ಸೋಮವಾರ ಚಾಲನೆ ನೀಡಲಾಯಿತು.
ಪಟ್ಟಣದ ನಾಗಾವಿ ಶೈಕ್ಷಣಿಕ ಹಬ್ ಪ್ರದೇಶದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ಆಯೋಜಿಸಿದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಅಮರದೀಪ್ ಪವಾರ್ ಚಾಲನೆ ನೀಡಿದರು.
ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ಮಾತನಾಡಿ, ‘ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಕೊರೊನಾ ವೈರಾಣುವಿನಿಂದ ರಕ್ಷಣೆ ಪಡೆಯಲು ಮಕ್ಕಳು ಲಸಿಕೆ ಪಡೆಯುವುದು ಅತ್ಯವಶ್ಯಕವಾಗಿದೆ. ಪ್ರಥಮ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಲಸಿಕೆ ಪಡೆಯಬೇಕು’ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರು ಮಾತನಾಡಿ, ಮಕ್ಕಳು ಲಸಿಕೆ ಪಡೆಯುವುದರಿಂದ ಶಾಲೆ ಮುಚ್ಚುವಂತ ಪರಿಸ್ಥಿತಿ ಬರಲಾರದು. ಎಲ್ಲಾ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಪಾಲಕ ಮತ್ತು ಪೋಷಕರು ಮಕ್ಕಳಿಗೆ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರದೀಪ್ ಪವಾರ್ ಅವರು ಮಾತನಾಡಿ, ಕೊರೊನಾ ವೈರಸ್ನಿಂದ ರಕ್ಷಣೆ ಪಡೆಯಲು ತಾಲ್ಲೂಕಿನಲ್ಲಿ 2.82 ಲಕ್ಷ ಜನರಿಗೆ ಮೊದಲ ಡೋಸ್, 1.60 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ಹಾಕಲಾಗಿದೆ’ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಉದ್ಘಾಟಿಸಿದರು. ಅತಿಥಿಯಾಗಿದ್ದ ಅರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅವರು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಸುನಂದಾ ಬಾರಾಡ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ ಇದ್ದರು. ಶಿಕ್ಷಣ ಸಂಯೋಜಕ ಸಂತೋಷಕುಮಾರ ಶಿರನಾಳ ಅವರು ಸ್ವಾಗತಿಸಿ ನಿರೂಪಿಸಿದರು.