ಕಲಬುರ್ಗಿ: ದಕ್ಷಿಣ ಕನ್ನಡ ಜಿಲ್ಲೆ ಬಂಟವಾಳದಲ್ಲಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಕಚೇರಿಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿದರು.
ಜನವರಿ 2ರಂದು ರಾತ್ರಿ ಕಚೇರಿ ಬಾಗಿಲು ಒಡೆದು ದಾಖಲೆಗಳ ಪತ್ರಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದು, ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರೇ ಈ ಕೃತ್ಯ ಎಸಗಿದ್ದಾರೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಸಹ ಕಾರ್ಯದರ್ಶಿಗಳಾದ ಪ್ರಭುದೇವ ಯಳಸಂಗಿ, ಮಹೇಶಕುಮಾರ ರಾಠೋಡ, ಮುಖಂಡರಾದ ಮೌಲಾ ಮುಲ್ಲಾ, ಎಚ್.ಎಸ್.ಪತಕಿ, ಶರಣಬಸಪ್ಪ ಗಣಜಲಖೇಡ ನೇತೃತ್ವ ವಹಿಸಿದ್ದರು.