ಕಲಬುರಗಿ: ‘2022-23ನೇ ಸಾಲಿನ ಸ್ಥಳೀಯ ಪ್ರಕೃತಿ ವಿಕೋಪದಡಿ 22,200 ರೈತರಿಗೆ ಪಾವತಿಸಲು ಬಾಕಿ ಇರುವ ₹12.84 ಕೋಟಿಯನ್ನು ಮುಂದಿನ 2-3 ದಿನಗಳಲ್ಲಿ ಪಾವತಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ವಿಮಾ ಕಂಪೆನಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
2022-23ನೇ ಸಾಲಿನ ಮುಂಗಾರು ಹಂಗಾಮಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರ ಇತ್ಯರ್ಥ ಕುರಿತು ಹಾಗೂ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಕುರಿತು ಗುರುವಾರ ಸಭೆ ನಡೆಸಿ ಅವರು ಮಾತನಾಡಿದರು.
‘ಮುಂಗಾರು ಹಂಗಾಮಿನಲ್ಲಿ 2023ನೇ ಸಾಲಿನ ಜುಲೈ ತಿಂಗಳಲ್ಲಿ ಉದ್ದು, ಹೆಸರು, ತೊಗರಿ, ಸೂರ್ಯಕಾಂತಿ, ಅವರೆ ಸೇರಿದಂತೆ ಅತಿ ಹೆಚ್ಚು ಮಳೆಯಾಗಿದೆ. ಹೀಗಾಗಿ ಮಧ್ಯಮ ಅವಧಿ ಬೆಳೆಹಾನಿ ಹಾಗೂ ಮಧ್ಯಂತರ ಪರಿಹಾರ ಘೋಷಿಸಲು ಮಾಡಲು ಜಿಲ್ಲಾಮಟ್ಟದ ಸಮಿತಿಯಲ್ಲಿ ಪರಿಶೀಲಿಸಲಾಗಿದೆ’ ಎಂದರು.
‘ಚಿಂಚೋಳಿ, ಚಿತ್ತಾಪುರ, ಸೇಡಂ, ಕಾಳಗಿ ಹಾಗೂ ಕಮಲಾಪುರದ ನರೋಣ ಹಾಗೂ ಯಡ್ರಾಮಿ ಹೋಬಳಿಗಳಲ್ಲಿ ಅತಿ ಹೆಚ್ಚು ಮಳೆ ಹಾನಿಯಾಗಿದೆ. ವಿಮಾ ಕಂಪೆನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಮುಂದಿನ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು’ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಬೆಳೆ ಹಾನಿ ಸಮೀಕ್ಷಾ ತಂಡ ಬಂದಾಗ ರೈತರು ಅವರಿಗೆ ಹಾನಿಯಾದ ಬೆಳೆ ತೋರಿಸಬೇಕು ಎಂದು ಕೋರಿದರು.
‘2023-24ರ ಮುಂಗಾರು ಹಂಗಾಮಿನಲ್ಲಿ ನಷ್ಟ ಪರಿಹಾರ ಮೊತ್ತವನ್ನು ನೀರಾವರಿ ಬೆಳೆಗಳಿಗೆ ಶೇ 90ರಷ್ಟು ಹಾಗೂ ಮಳೆ ಆಶ್ರಿತ ಬೆಳೆಗಳಿಗೆ ಶೇ 80ರಷ್ಟು ನಿಗದಿಪಡಿಸಲಾಗಿದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಹಣಕಾಸು ಪ್ರಮಾಣ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ’ ಎಂದರು.
ಸಭೆಯಲ್ಲಿ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶುರನ್ಸ್ ಕಂಪನಿ, ಲೀಡ್ ಬ್ಯಾಂಕ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.