ಶಹಾಬಾದ್: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಿಂದ ಸಂಕಷ್ಟದಲ್ಲಿದ್ದು, ಸರ್ಕಾರ ಸಮಪರ್ಕವಾಗಿ ಬರ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರಾಜೇಂದ್ರ ಅತನೂರು ಆಗ್ರಹಿಸಿದರು.
ನಗರದ ತಹಶೀಲ್ದಾರ್ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ತಾಲ್ಲೂಕು ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಕಾರರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 223 ತಾಲ್ಲೂಕುಗಳಲ್ಲಿ ಬರವಿದ್ದು, ಜನಜಾನುವಾರುಗಳಿಗೆ ನೀರು–ಮೇವಿನ ಅಭಾವ ಎದುರಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಿಸಿದೆ. ಹೀಗಾಗಿ ಸರ್ಕಾರ ಕೂಡಲೇ ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ವಿತರಿಸಬೇಕು’ ಎಂದು ಮನವಿ ಮಾಡಿದರು.
ಮಾದೇವಯ್ಯ ಸ್ವಾಮಿ, ನೀಲಕಂಠ ಹುಲಿ, ಮಲ್ಲಣ್ಣಗೌಡ, ಬಸಣ್ಣ ರೆಡ್ಡಿ, ಮಲ್ಲಿಕಾರ್ಜುನ ಸ್ವಾಮಿ ಭಂಕೂರು, ಹನುಮಂತರಾಯ ಭಂಕೂರು, ಮಲ್ಲಿಕಾರ್ಜುನ ಹೊಸಮನಿ, ಭೀಮರಾಯ ಭಂಕೂರು ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.