ಚಿತ್ತಾಪುರ: ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಾಗಿಣಾ ನದಿ ಮೈದುಂಬಿ ಹರಿಯುತ್ತಿದೆ. ದಂಡೋತಿ ಸಮೀಪದ ಕಾಗಿಣಾ ಸೇತುವೆ ಶುಕ್ರವಾರ ಮುಳುಗಡೆಯಾಗಿ ಸಂಚಾರ ಸ್ಥಗಿತಗೊಂಡಿತು. ಮಧ್ಯಾಹ್ನದ ವೇಳೆಗೆ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಯಿತು.
ಸೇತುವೆ ಮುಳುಗಡೆಯಾದ ಕಾರಣ ಬಸ್ಗಳು ಶಹಾಬಾದ್ ಮಾರ್ಗವಾಗಿ ಕಲಬುರಗಿಗೆ ತೆರಳಿದವು. ಚಿತ್ತಾಪುರ-ಕಾಳಗಿ ಬಸ್ ಸಂಚಾರ ಬಂದ್ ಆಗಿತ್ತು. ಸೇಡಂ ಬಸ್ಗಳು ಮಳಖೇಡ ಮಾರ್ಗವಾಗಿ ಸಂಚರಿಸಿದವು. ಪ್ರವಾಹದ ನೀರು ನದಿ ಸುತ್ತಮುತ್ತಲಿನ ಹೊಲಗಳಿಗೆ ನುಗ್ಗಿ ಬೆಳೆ ಹಾನಿಯಾಗಿದೆ. ಹೊಲಗಳ ತಗ್ಗು ಪ್ರದೇಶದಲ್ಲಿ ಮಳೆ ನೀರು ಸಂಗ್ರಹಗೊಂಡಿದೆ. ಮುಂಗಾರು ಬೆಳೆಗಳಾದ ಹೆಸರು, ಉದ್ದು, ತೊಗರಿ ಜಲಾವೃತವಾಗಿವೆ. ಹಳ್ಳ–ಕೊಳ್ಳಗಳು ತುಂಬಿ ಹರಿಯುತ್ತಿವೆ.
ಮಾಸಿಕ ಪರೀಕ್ಷೆ ಮುಂದೂಡಿಕೆ
ನದಿ ಆಚೆಗಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲೇಜಿಗೆ ಬರಲಾಗದೆ ಸಮಸ್ಯೆ ಅನುಭವಿಸಿದರು. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಮಾಸಿಕ ಪರೀಕ್ಷೆ ಮುಂದೂಡಲಾಗಿದೆ ಎಂದು ನಾಗಾವಿ ಶಿಕ್ಷಣ ಸಂಸ್ಥೆ ಸಂಚಾಲಿತ ಪಿಯು ಕಾಲೇಜಿನ ಪ್ರಾಂಶುಪಾಲ ವೀರಾರೆಡ್ಡಿ ಶೇರಿ ‘ಪ್ರಜಾವಾಣಿ’ಗೆ ತಿಳಿಸಿದರು.
ವಿದ್ಯುತ್ ಇಲ್ಲದೆ ಪರದಾಟ: ಮಳೆಯಿಂದಾಗಿ ಗುರುವಾರ ದಿನಪೂರ್ತಿ ಚಿತ್ತಾಪುರ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಇಲ್ಲದೆ ಜನರು ತೀವ್ರ ತೊಂದರೆ ಅನುಭವಿಸಿದರು. ರಾತ್ರಿ ವಿದ್ಯುತ್ ಕೈಕೊಟ್ಟಿದ್ದರಿಂದ ಗ್ರಾಮೀಣ ಭಾಗ ಕತ್ತಲಲ್ಲಿ ಮುಳುಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.