ಅಫಜಲಪುರ: ಲೋಕಸಭೆ ಚುನಾವಣೆ ನಿಮಿತ್ತ ಸೋಮವಾರ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ತಾಲ್ಲೂಕಿನ ದೇವಲಗಾಣಗಾಪುರ, ಮದರಾ(ಬಿ) ಮತಗಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿದರು.
ತಾಲ್ಲೂಕು ಚುನಾವಣೆ ಅಧಿಕಾರಿ ಹಾಗೂ ತಹಶೀಲ್ದಾರ್ ಸಂಜುಕುಮಾರ ದಾಸರ ಅವರು, ಮತಗಟ್ಟೆ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಪಿಡಿಒಗಳು ಹಾಗೂ ಸಿಬ್ಬಂದಿ ಮತ್ತಿತರರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಮತ್ತು ಆಲಮಟ್ಟಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಪಟ್ಟಣದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡುತ್ತಾರೆ ಎಂದು ಮಾಹಿತಿ ಬಂದಿತ್ತು. ಆದರೆ ಜಿಲ್ಲಾಧಿಕಾರಿಗಳ ಭೇಟಿ ಕೊನೆಗಳಿಗೆಯಲ್ಲಿ ರದ್ದಾಯಿತು ಎಂದು ತಿಳಿದು ಬಂದಿದೆ.