ಕಲಬುರ್ಗಿ: ಗುತ್ತಿಗೆ ಪದ್ಧತಿ ರದ್ದು ಮಾಡುವಂತೆ ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರ ಕಲ್ಯಾಣ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ಮಾಡಿದರು.
ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ನೇರ ನೇಮಕಾತಿಯಲ್ಲಿ ಮೊದಲ ಪ್ರಾಶಸ್ತ್ಯ ನೀಡಬೇಕು. ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. 2018–19ನೇ ಸಾಲಿನ ಪರಿಷ್ಕೃತ ವೇತನವನ್ನು ಜಾರಿ ಮಾಡಬೇಕು. 2016ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಬಾಕಿ ವೇತನವನ್ನು ಪಾವತಿಸಬೇಕು. ಸಿಂಡಿಕೇಟ್ ಸಭೆಯ ನಿರ್ಣಯದಂತೆ ಕನಿಷ್ಠ ವೇತನ ವ್ಯತ್ಯಾಸದ ₹1.48 ಕೋಟಿ ಹಣವನ್ನು ನೌಕರರಿಗೆ ಪಾವತಿಸಬೇಕು ಎಂದು ಆಗ್ರಹಿಸಿದರು.
ಸಂಘದ ಗೌರವ ಅಧ್ಯಕ್ಷ ವಿಜಯಕುಮಾರ ಕೆಂಗಲ್, ಅಧ್ಯಕ್ಷ ಶೀಲಪ್ರಕಾಶ ದೊಡ್ಡಮನಿ, ಕಾರ್ಯದರ್ಶಿ ರಾಕೇಶ ಎಂ. ಪ್ರತಿಭಟನೆಯ ನೇತೃತ್ವ ವಹಿಸಿದ್ದರು.