ಕಲಬುರಗಿ: ‘ಹೊಲಗೇರಿ ಪದ ಬಳಕೆ ಮಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯಿಂದ ದೂರು ದಾಖಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಒತ್ತಾಯಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಲಗೇರಿ ಜನರ ಬೆವರಿನಿಂದ ನೀವು ವಾಸಿಸುವ ಊರು ವೈಭವದಿಂದ ಕಾಣುತ್ತಿದೆ. ಅದನ್ನು ನೀವು ಮರೆಯಬಾರದು’ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
‘ಕಸ್ತೂರಿ ರಂಗನ್ ವರದಿ ಜಾರಿಗೊಳಿಸಿರುವುದನ್ನು ವಿರೋಧಿಸಿ ನಡೆದ ಸಭೆಯಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕಲ್ಯಾಣ ಕರ್ನಾಟಕ ಭಾಗದ ಜನ ಸುಟ್ಟು ಕರಕಲು ಮುಖ ಉಳ್ಳವರಿದ್ದಾರೆ ಎಂದು ಲೇವಡಿ ಮಾಡಿದ್ದರು. ಚಿತ್ರ ನಟ ಉಪೇಂದ್ರ ಹೇಳಿಕೆ ನೀಡಿದ ವಿಷಯದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿರುದ್ಧ ಏಕೆ ಪ್ರಕರಣ ದಾಖಲಾಗುವುದಿಲ್ಲ’ ಎಂದು ಪ್ರಶ್ನಿಸಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ, ಜೇವರ್ಗಿ ತಾಲ್ಲೂಕು ಸಂಚಾಲಕ ಮಹೇಶ ಕೋಕಿಲೆ, ನಗರ ಸಂಚಾಲಕ ಶಿವಕುಮಾರ್ ಕೋರಳ್ಳಿ, ಸಿದ್ದು ಕೋನೂರ ಇದ್ದರು.