ಸೇಡಂ: ತಾಲ್ಲೂಕಿನ ಮಳಖೇಡದ ಕಾಗಿಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗೆ ಭಾನುವಾರ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿದರು.
ಹೊಸದಾಗಿ ನಿರ್ಮಿಸಲಾಗುತ್ತಿರುವ ಸೇತುವೆ ವಿಳಂಬಕ್ಕೆ ಕಾರಣಗಳನ್ನು ತಿಳಿದ ಅವರು ವಿಳಂಬಕ್ಕೆ ಬೇಸರ ವ್ಯಕ್ತಪಡಿಸಿದರು.
‘ಕಾಗಿಣಾ ನದಿ ನೀರಿನಿಂದ ಸೇತುವೆ ಮುಳುಗಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಪರ್ಯಾಯವಾಗಿ ಚಿತ್ತಾಪುರ, ಶಹಾಬಾದ್ ಮೂಲಕ ವಾಹನಗಳು ತೆರಳಿವೆ’ ಎಂದು ತಹಶೀಲ್ದಾರ್ ಶಿವರಾಜ ತಿಳಿಸಿದರು.
ನಂತರ ಮಳಖೇಡದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಶಾಲೆಯ ಸ್ಥಿತಿಗತಿ ಪರಿಶೀಲಿಸಿದರು. ಶಾಲೆ ಬಹಳ ಹಳೆಯದಾಗಿದ್ದು, ಸೋರುತ್ತಿದೆ. ದುರಸ್ತಿಗೆ ಕೈಗೊಂಡಿರುವ ಕ್ರಮ ಏನು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಾಲೆಯ ನವೀಕರಣಕ್ಕಾಗಿ ಯೋಜನೆ ಹಾಕಿಕೊಳ್ಳಲಾಗಿದ್ದು, ಸರ್ಕಾರದಲ್ಲಿ ಕಡತವಿದೆ. ಶೀಘ್ರ ಅನುದಾನ ಬಿಡುಗಡೆಯಾದಲ್ಲಿ, ದುರಸ್ತಿ ಮಾಡಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಂಗಾವಿ(ಎಂ) ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ, ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಜನರು ನದಿಯತ್ತ ತೆರಳದಂತೆ ಬ್ಯಾರಿಕೆಡ್ ಹಾಕಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಉಪವಿಭಾಗಾಧಿಕಾರಿ ಆಶಪ್ಪ ಪೂಜಾರಿ, ತಾ.ಪಂ ಇಒ ಚನ್ನಪ್ಪ ರಾಯಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಸಹಾಯಕ ಕೃಷಿ ನಿರ್ದೇಶಕ ವೈ.ಎಲ್.ಹಂಪಣ್ಣ, ಮಾರುತಿ ನಾಯಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.