ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಕೊಂಚೂರು ಏಕಲವ್ಯ ವಸತಿ ಶಾಲೆಯ ಪ್ರಾಚಾರ್ಯರಾದ ಶಿವಮ್ಮ ಬಡಿಗೇರ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ.
ವಸತಿ ಶಾಲೆಯ ಹಲವು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೆಳಿಗ್ಗೆ 4ಕ್ಕೆ ಲಾಡ್ಲಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮ್ಮ ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿನಿಯರು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಪ್ರಾಚಾರ್ಯರ ವರ್ತನೆ ತಮಗೆ ಬೇಸರ ತರಿಸಿದೆ. ಹಾಗಾಗಿ, ವಸತಿ ಶಾಲೆಯಿಂದ ತಮಗೆ ವರ್ಗಾವಣೆ ಪತ್ರ ಕೊಡಿಸಬೇಕು ಎಂದೂ ಬೇಡಿಕೆ ಇಟ್ಟಿದ್ದಾರೆ.